ಕಳೆದ 6 ತಿಂಗಳಿಂದ ಬಂದ್ ಆಗಿದ್ದ ಶಿರಾಡಿ ಮಾರ್ಗ ಸಂಚಾರಕ್ಕೆ ಮುಕ್ತ

Public TV
1 Min Read

ಹಾಸನ: ರಾಜಧಾನಿಯಿಂದ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್‍ನ 2ನೇ ಹಂತದ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡಿದ್ದು, ಇದೇ 15 ಅಥವಾ 16 ರಂದು ಸಂಚಾರಕ್ಕೆ ಮುಕ್ತವಾಗಲಿದೆ.

ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಿರುವ ಒಟ್ಟು 26 ಕಿ.ಮೀ ಉದ್ದದ ಶಿರಾಡಿಘಾಟ್ ಕಾಂಕ್ರೀಟ್ ರಸ್ತೆ ಸುಮಾರು 30 ವರ್ಷ ಬಾಳಿಕೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಜನವರಿ 20 ರಿಂದ ಆರಂಭವಾಗಿದ್ದ 74 ಕೋಟಿ ರೂ. ವೆಚ್ಚ, 12.38 ಕಿಮೀ ಉದ್ದದ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದೆ. ನೂತನ ರಸ್ತೆ ಉದ್ಘಾಟನೆಗೆ ಅಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಗುರುವಾರ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ಸೈಡ್ ವಾಲ್, ಸೂಚನಾ ಫಲಕ ಅಳವಡಿಕೆ ಸೇರಿದಂತೆ ಕೆಲವು ಸಣ್ಣಪುಟ್ಟ ಕೆಲಸ ಹೊರತುಪಡಿಸಿದರೆ ಸಿಮೆಂಟ್ ಹಾಕುವ ಕೆಲಸ ಮುಗಿದಿದೆ. ನೂತನ ರಸ್ತೆ ಲೋಕಾರ್ಪಣೆಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಆಹ್ವಾನ ನೀಡಲಾಗಿದೆ. ಅವರು ಅನುಮತಿ ನೀಡಿದರೆ ಇದೇ ತಿಂಗಳ 15 ಅಥವಾ 16ರಂದು ಕಳೆದ 6 ತಿಂಗಳಿಂದ ಬಂದ್ ಆಗಿದ್ದ ಶಿರಾಡಿ ಮಾರ್ಗ ಸಂಚಾರಕ್ಕೆ ಮುಕ್ತವಾಗಲಿದೆ.

Share This Article
1 Comment

Leave a Reply

Your email address will not be published. Required fields are marked *