ಮೋದಿ ಅಮೆರಿಕ ಪ್ರವಾಸದಿಂದ ಭಾರತಕ್ಕೆ ಏನು ಲಾಭವಾಯ್ತು: ಸಿದ್ದರಾಮಯ್ಯ ಪ್ರಶ್ನೆ

Public TV
2 Min Read

ಕಲಬುರಗಿ: ಭಾರತಕ್ಕೆ ಟ್ರಂಪ್ ಆಗಮನದಿಂದ ಏನೂ ಆಗಲ್ಲಾ. ಒಂದು ದೇಶದ ಅಧ್ಯಕ್ಷರು ಬಂದರೆ ಅವರಿಗೆ ಒಳ್ಳೆಯ ಸ್ವಾಗತ ಮಾಡೋದು ನಮ್ಮ ಕರ್ತವ್ಯ. ಆದರೆ ಅದು ಅಗತ್ಯಕ್ಕಿಂತ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಅಮೆರಿಕ ಪ್ರವಾಸ ಮಾಡಿದ್ದಾರೆ. ಅದರಿಂದ ಭಾರತಕ್ಕೆ ಏನು ಲಾಭವಾಯ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಭಾರತ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಭಾರತ ಅಮೆರಿಕದೊಂದಿಗೆ ಯಾವುದೇ ಆಮದು ಒಪ್ಪಂದಕ್ಕೆ ಮುಂದಾಗಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹಾಗೆಯೇ ಟ್ರಂಪ್ ಆಗಮನದಿಂದ ಭಾರತಕ್ಕೆ ಏನೂ ಲಾಭವಾಗುವುದಿಲ್ಲ, ಯಾಕೆಂದರೆ ಈ ಹಿಂದೆ ಪ್ರಧಾನಿ ಮೋದಿ ಅಮೆರಿಕ ಪ್ರವಾಸದಿಂದ ಭಾರತಕ್ಕೆ ಏನು ಲಾಭವಾಗಿದೆ ಎಂದು ಪ್ರಶ್ನಿಸಿ ಕಿಡಿಕಾರಿದರು.

ಇದೇ ವೇಳೆ ಎಐಸಿಸಿ ಅಧ್ಯಕ್ಷರ ವಿಚಾರವಾಗಿ ಮಾತನಾಡಿ, ರಾಹುಲ್ ಗಾಂಧಿ ಅವರೇ ಮತ್ತೆ ಎಐಸಿಸಿ ಅಧ್ಯಕ್ಷರಾಗಬೇಕು. ಇದು ನನ್ನ ಬೇಡಿಕೆ ಸಹ ಆಗಿದೆ. ಇತ್ತ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಶೀಘ್ರದಲ್ಲಿ ಆಗುತ್ತದೆ ಎಂದರು. ಬಳಿಕ ಸಿದ್ದರಾಮಯ್ಯ ಹೊಸ ಪಕ್ಷ ಪ್ರಾರಂಭಿಸ್ತಾರೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ರಾಜಕೀಯ ಅನುಭವ ಕಡಿಮೆ ಅವರ ಮಾತಿಗೆ ನಾನು ರಿಯಾಕ್ಟ್ ಮಾಡಲ್ಲ ಎಂದು ಟಾಂಗ್ ಕೊಟ್ಟರು.

15ನೇ ಹಣಕಾಸಿನ ಆಯೋಗದಿಂದ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಈ ವರ್ಷ 9 ಸಾವಿರ ಕೋಟಿ ರೂ. ಕಡಿಮೆಯಾಗಿದೆ. ಮುಂದಿನ ವರ್ಷ 11,258 ಕೋಟಿ ರೂ. ಕಡಿಮೆಯಾಗಲಿದೆ. ಯಡಿಯೂರಪ್ಪ ಮತ್ತು 25 ಜನ ಎಂಪಿಗಳು ಏನು ಮಾಡ್ತಿದ್ದಾರೆ? ಇದರ ಬಗ್ಗೆ ಯಾರಾದರೂ ಧ್ವನಿ ಎತ್ತುತ್ತಿದ್ದಾರಾ? ಪ್ರವಾಹ ಬಂದಾಗಲೂ ರಾಜ್ಯಕ್ಕೆ ಹೆಚ್ಚಿನ ಪರಿಹಾರ ನೀಡಲಿಲ್ಲ. ಯಡಿಯೂರಪ್ಪ ನಿಯೋಗ ಕರೆದುಕೊಂಡು ಹೋಗಲಿಲ್ಲಾ. ಯಾಕೆಂದರೆ ಮೋದಿ ಮತ್ತು ಅಮಿತ್ ಶಾ ಅವರಿಗೆ ಯಡಿಯೂರಪ್ಪ ಹೆದರುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಯಡಿಯೂರಪ್ಪ ವೀಕೆಸ್ಟ್ ಮುಖ್ಯಮಂತ್ರಿ ನಾನು ರಾಜಕೀಯ ಜೀವನದಲ್ಲಿ ಅಧಿಕಾರದ ಹಿಂದೆ ಹೋಗಲ್ಲ. ಬಿಜೆಪಿಯ ಅನೇಕರು ಅವರ ಪಕ್ಷ ತೊರೆಯಲು ಸಿದ್ಧರಾಗಿದ್ದಾರೆ. ಇದರಿಂದ ಬಿಜೆಪಿಯಲ್ಲಿ ತಳಮಳ ಪ್ರಾರಂಭವಾಗಿದೆ, ಅಧಿಕಾರದ ಕಚ್ಚಾಟ ಪ್ರಾರಂಭವಾಗಿದೆ. ಬಿಜೆಪಿ ಕಚ್ಚಾಟದಿಂದ ಸರ್ಕಾರ ಬಿದ್ದರೆ ಮತ್ತೆ ಅಧಿಕಾರ ಹಿಡಿಯುವ ಯೋಚನೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *