ಸಂಜೆವರೆಗೆ ಡೆಡ್‍ಲೈನ್, ಬಾರದೇ ಇದ್ದರೆ ಕಠಿಣ ಕ್ರಮ

Public TV
2 Min Read

ಬೆಂಗಳೂರು: ಇವತ್ತು ಸಂಜೆಯ ಒಳಗಡೆ ಅತೃಪ್ತ ಶಾಸಕರು ಬರಲೇಬೇಕು. ಒಂದು ವೇಳೆ ಬಾರದೇ ಇದ್ದರೆ ಪಕ್ಷಾಂತರ ಕಾಯ್ದೆಯ ಅಡಿ ನಾಲ್ವರು ಅತೃಪ್ತ ಶಾಸಕರನ್ನು ಅನರ್ಹತೆ ಮಾಡಲು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿದೆ.

ಗುರುವಾರದ ಕಲಾಪಕ್ಕೆ ಹಾಜರಾಗಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿ ಮಾಡಿದ್ದರು. ವಿಪ್ ಜಾರಿ ಮಾಡಿದ್ದರೂ ರಮೇಶ್ ಜಾರಕಿಹೊಳಿ(ಗೋಕಾಕ್), ಬಿ. ನಾಗೇಂದ್ರ(ಬಳ್ಳಾರಿ ಗ್ರಾಮಾಂತರ), ಉಮೇಶ್ ಜಾಧವ್(ಚಿಂಚೋಳಿ), ಮಹೇಶ್ ಕುಮಠಳ್ಳಿ(ಅಥಣಿ) ಸದನಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಇವರನ್ನು ಅನರ್ಹತೆ ಮಾಡಲು ಸಿದ್ಧತೆ ನಡೆದಿದೆ.

ಈಗಾಗಲೇ ಸದನಕ್ಕೆ ಹಾಜರಾಗಬೇಕೆಂದು ಕೊಠಡಿಗೆ ನೋಟಿಸ್ ಅಂಟಿಸಲಾಗಿದೆ. ಸಂಜೆಯ ಒಳಗಡೆ ಬಾರದೇ ಇದ್ದರೆ ಸ್ಪೀಕರ್ ರಮೇಶ್ ಕುಮಾರ್ ಮೂಲಕ ನಾಲ್ಕು ಶಾಸಕರನ್ನು ಅನರ್ಹಗೊಳಿಸುವ ಸಂಬಂಧ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ಮಾಹಿತಿ ನೀಡಿವೆ.

ಫೆ.6 ರಿಂದ ಫೆ.15ರ ವರೆಗೆ ವಿಧಾನಸೌಧದಲ್ಲಿ ನಡೆಯಲಿರುವ ಅಧಿವೇಶನಕ್ಕೆ ಕಡ್ಡಾಯವಾಗಿ ಎಲ್ಲ ಶಾಸಕರು ಹಾಜರಿರಬೇಕೆಂದು ಕಟ್ಟು ನಿಟ್ಟಿನ ಸೂಚನೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಸಿದ್ದರಾಮಯ್ಯ ಕಚೇರಿಯಿಂದ ಖುದ್ದಾಗಿ ಶಾಸಕರ ಕೈಗೆ ವಿಪ್ ನೀಡಿ ಸಿಬ್ಬಂದಿ ಸಹಿಯನ್ನು ಪಡೆದುಕೊಂಡಿದ್ದಾರೆ.

ಪಕ್ಷಾಂತರ ಕಾಯ್ದೆ ಏನು ಹೇಳುತ್ತೆ?
ಪಕ್ಷಾಂತರ ನಿಷೇಧ ಕಾಯ್ದೆಯಡಿ ಪಕ್ಷದ ಆದೇಶ ಉಲ್ಲಂಘಿಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಬಹುದು. ಆಗ ಸಹಜವಾಗಿಯೇ ಶಾಸಕರು ಅನರ್ಹರಾಗುತ್ತಾರೆ. ಅನರ್ಹ ಶಾಸಕರು ವಿಧಾನಸಭೆ ಅವಧಿ ಮುಗಿಯುವವರೆಗೆ ಬೇರೆ ಪಕ್ಷಕ್ಕೆ ಸೇರುವಂತಿಲ್ಲ. ಹಾಲಿ ವಿಧಾನಸಭೆ ಅವಧಿ ಮುಗಿಯುವವರೆಗೂ ಉಪ ಚುನಾವಣೆಯಲ್ಲೂ ಸ್ಪರ್ಧಿಸುವಂತಿಲ್ಲ. ಅನರ್ಹಗೊಂಡ ಶಾಸಕರು ಮಂತ್ರಿ ಸ್ಥಾನ ಸೇರಿದಂತೆ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದುವಂತಿಲ್ಲ.

ಅನರ್ಹಗೊಂಡ ದಿನದಿಂದ ಅವರ ಶಾಸಕತ್ವ ಅವಧಿ ಯಾವಾಗ ಮುಗಿಯುತ್ತೋ ಅಲ್ಲಿವರೆಗೆ ಹುದ್ದೆಗಳನ್ನ ಹೊಂದುವಂತಿಲ್ಲ. ಪಕ್ಷದ ಒಟ್ಟು ಶಾಸಕರಲ್ಲಿ 2/3ರಷ್ಟು ಶಾಸಕರು ಗುಂಪಾಗಿ ಪಕ್ಷಾಂತರ ಮಾಡಿದರಷ್ಟೇ ಅನರ್ಹತೆ ಅನ್ವಯಿಸಲ್ಲ. ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ವಿಧಾನಸಭೆ ಸ್ಪೀಕರ್ ಕೈಯಲ್ಲಿದ್ದು, ಅನರ್ಹತೆ ಪ್ರಶ್ನಿಸಿ ಸ್ಪೀಕರ್ ಅವರಿಗೂ ಮನವಿ, ಕಾನೂನು ಹೋರಾಟವನ್ನೂ ಮಾಡಬಹುದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *