ಇಂಡೋ-ಪಾಕ್ ದ್ವಿಪಕ್ಷೀಯ ಸರಣಿಗೆ ಪಿಎಂ ಅನುಮೋದನೆ ಬೇಕು: ಸೌರವ್ ಗಂಗೂಲಿ

Public TV
2 Min Read

ಕೋಲ್ಕತ್ತಾ: ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆಸಲು ಎರಡು ದೇಶಗಳ ಪ್ರಧಾನ ಮಂತ್ರಿಗಳ ಅನುಮೋದನೆ ಬೇಕು ಎಂದು ಬಿಸಿಸಿಐ ಅಧ್ಯಕ್ಷ ಸ್ಥಾನ ಅಲಂಕರಿಸಲಿರುವ ಸೌರವ್ ಗಂಗೂಲಿ ಹೇಳಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿರುವ ಗಂಗೂಲಿ ಇಂದು ಕೋಲ್ಕತ್ತಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿ ನಡೆಸಲು ಎರಡು ದೇಶದ ಪ್ರಧಾನ ಮಂತ್ರಿಗಳ ಅನುಮೋದನೆ ಬೇಕು ಎಂದು ತಿಳಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವೆ ಯಾವಾಗ ದ್ವಿಪಕ್ಷೀಯ ಸರಣಿ ನಡೆಯಬೇಕು ಎಂಬುದನ್ನು ನೀವು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅನ್ನು ಕೇಳಬೇಕು. ಇದು ದೇಶ ತೆಗೆದುಕೊಂಡಿರುವ ನಿರ್ಧಾರ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾವು ಆಟವಾಡಬೇಕು ಎಂದರೆ ದೇಶದ ಅನುಮತಿ ಇರಬೇಕು. ಅದ್ದರಿಂದ ಈ ಪ್ರಶ್ನೆಗೆ ನಮ್ಮ ಬಳಿ ಉತ್ತರವಿಲ್ಲ ಎಂದು ಹೇಳಿದ್ದಾರೆ.

ಸೌರವ್ ಗಂಗೂಲಿ ಅವರ ನಾಯಕತ್ವದಲ್ಲಿ ಭಾರತದ ಪಾಕಿಸ್ತಾನಕ್ಕೆ 2004 ರಲ್ಲಿ ಪ್ರವಾಸ ಹೋಗಿತ್ತು. ಈ ಪ್ರವಾಸ 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದ ಬಳಿಕ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪ್ರವಾಸವಾಗಿತ್ತು. 1989ರ ನಂತರ ಮೊದಲ ಬಾರಿ ಭಾರತ ಪಾಕಿಸ್ತಾನಕ್ಕೆ ಪ್ರವಾಸ ಹೋಗಿ ಪಾಕ್ ನೆಲದಲ್ಲಿ ಕ್ರಿಕೆಟ್ ಆಡಿತ್ತು.

ಭಾರತ ಮತ್ತು ಪಾಕಿಸ್ತಾನ ಎರಡು ತಂಡಗಳು 2012ರಲ್ಲಿ ಕೊನೆಯ ಬಾರಿಗೆ ದ್ವಿಪಕ್ಷೀಯ ಸರಣಿಯನ್ನು ಭಾರತದಲ್ಲಿ ಆಡಿತ್ತು. ಈ ಸರಣಿಯಲ್ಲಿ ಭಾರತ ಎರಡು ಟಿ-20 ಪಂದ್ಯಗಳು ಮತ್ತು ಮೂರ ಏಕದಿನ ಪಂದ್ಯಗಳ ಆತಿಥ್ಯವನ್ನು ವಹಿಸಿಕೊಂಡಿತ್ತು. ಇದಾದ ನಂತರ ಭಾರತ ಮತ್ತು ಪಾಕಿಸ್ತಾನ ಐಸಿಸಿ ಟೂರ್ನಿಯಲ್ಲಿ ಬಿಟ್ಟರೆ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡಿಲ್ಲ.

ಕಳೆದ ಭಾನುವಾರ ಮುಂಬೈನಲ್ಲಿ ನಡೆದ ಸಭೆಯಲ್ಲಿ ಚುನಾವಣೆ ನಡೆಯದೇ ಅವಿರೋಧವಾಗಿ ಆಯ್ಕೆ ಸಂಬಂಧ ಮಾತುಕತೆ ನಡೆದಿತ್ತು. ಸೌರವ್ ಗಂಗೂಲಿ ಅವರನ್ನು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ, ಗೃಹ ಸಚಿವ ಅಮಿತ್ ಶಾ ಪುತ್ರ ಜೇ ಶಾ ಕಾರ್ಯದರ್ಶಿಯಾಗಿಯೂ, ಕೇಂದ್ರ ಕಾರ್ಪೋರೇಟ್ ಮತ್ತು ವ್ಯವಹಾರಗಳ ಖಾತೆಯ ರಾಜ್ಯ ಸಚಿವ, ಬಿಸಿಸಿಐ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರ ಸಹೋದರ ಅರುಣ್ ಧುಮಲ್ ಖಜಾಂಜಿ ಹುದ್ದೆಗೆ ಸ್ಪರ್ಧಿಸಿದ್ದು ಅ.23ಕ್ಕೆ ಅಧಿಕೃತವಾಗಿ ಘೋಷಣೆಯಾಗಲಿದೆ.

Share This Article
Leave a Comment

Leave a Reply

Your email address will not be published. Required fields are marked *