ಸಿಎಂ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ದೂರು ಬಂದ್ರೆ ಕ್ರಮ: ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ

Public TV
1 Min Read

ಬೆಂಗಳೂರು: ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆ ಉಲ್ಲಂಘನೆಯ ಹೇಳಿಕೆ ನೀಡಿದ್ದಾಗಿ ಯಾರಾದರೂ ದೂರು ನೀಡಿದರೆ ಸೂಕ್ತ ಕ್ರಮಕೈಗೊಳ್ಳುತ್ತೇವೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ 1,837 ಸ್ಕ್ವಾಡ್ ಗಳನ್ನು ನೇಮಿಸಿದ್ದೇವೆ. ಇದೂವರೆಗೆ 30 ಲಕ್ಷ ರೂ. ಹಣವನ್ನು ವಶಕ್ಕೆ ಮಾಡಲಾಗಿದೆ. ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ 50 ಸಾವಿರ ರೂ.ಗಿಂತ ಅಧಿಕ ಹಣ ತೆಗೆದುಕೊಂಡು ಹೊಗುವವರು ಸೂಕ್ತ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಗಿಫ್ಟ್ ಐಟಮ್ಸ್ ಇದ್ರೆ ಅದರ ಜೊತೆಗೆ ಅದರ ಬಿಲ್ ಮತ್ತು ಯಾವುದಕ್ಕಾಗಿ ತೆಗದುಕೊಂಡು ಹೋಗುತ್ತಿದ್ದೇವೆ ಎನ್ನುವ ದಾಖಲಾತಿ ಇರಬೇಕು. ಬ್ಯಾಂಕ್‍ನವರು ಸಹ ಸೂಕ್ತ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು. ಚುನಾವಣೆ ಪೂರ್ಣಗೊಳ್ಳುವವರೆಗೂ ಬ್ಯಾಂಕ್‍ನವರು ಹೆಚ್ಚಿನ ಹಣವನ್ನು ಸಾಗಿಸುವಂತಿಲ್ಲ. ರಾಜ್ಯಾದ್ಯಂತ 702 ನಾಕಬಂದಿಗಳನ್ನು ಹಾಕಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್‍ಗಳು ಅನಗತ್ಯವಾಗಿ ತೊಂದರೆ ಉಂಟು ಮಾಡಿದರೆ ಸ್ಥಳೀಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಬಹುದು ಎಂದು ತಿಳಿಸಿದರು.

ಲೋಕಸಭಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಜನಸಾಮಾನ್ಯರಿಗೆ ತೊಂದರೆಯಾಗುವುದು ಸಾಮಾನ್ಯ. ಆದರೆ ನ್ಯಾಯಯುತ ಚುನಾವಣೆಗೆ ಈ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದೆ. ಹೀಗಾಗಿ ಜನರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

ಸಿಎಂ ಹೇಳಿದ್ದೇನು?:
ಮಂಡ್ಯದ ಸಿಲ್ವರ್ ಜ್ಯುಬಲಿ ಪಾರ್ಕಿನಲ್ಲಿ ನಡೆದಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಜೂನ್‍ನಲ್ಲಿ ನಾನು ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಬರುತ್ತೇನೆ ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಸಿಎಂ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *