ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಮುಂಚೂಣಿಗೆ ತರಲು ಅಗತ್ಯ ಕ್ರಮ: ಡಾ.ಕೆ.ಸುಧಾಕರ್

Public TV
2 Min Read

ಬೆಂಗಳೂರು: ರಾಜ್ಯದ ಆರು ಜಿಲ್ಲೆಗಳಲ್ಲಿ ಹೆಚ್ಚು ಅಪೌಷ್ಠಿಕತೆ ಹೆಚ್ಚಿದೆ. ಈ ಸಮಸ್ಯೆಯನ್ನು ನಿವಾರಿಸಿ ಮುಂದಿನ ವರ್ಷ ನೀತಿ ಆಯೋಗದ ಆರೋಗ್ಯ ಸೂಚ್ಯಂಕದಲ್ಲಿ ರಾಜ್ಯವನ್ನು ಟಾಪ್ 3 ರಲ್ಲಿ ಬರುವಂತೆ ಪ್ರಯತ್ನಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 6 ಜಿಲ್ಲೆಗಳಲ್ಲಿ ಅಪೌಷ್ಠಿಕತೆ ಹೆಚ್ಚಿದೆ. ವಿಶೇಷ ಒತ್ತು ನೀಡಿ ಅಪೌಷ್ಠಿಕತೆ ನಿವಾರಣೆಗೆ ಕ್ರಮ ವಹಿಸಲಾಗುವುದು. ಮುಂದಿನ ವರ್ಷ ನೀತಿ ಆಯೋಗದ ಆರೋಗ್ಯ ಸೂಚ್ಯಂಕ ಟಾಪ್ 3 ರಲ್ಲಿ ಬರುವಂತೆ ಕ್ರಮ ವಹಿಸಲಾಗುವುದು ಎಂದರು. ಇದನ್ನೂ ಓದಿ: ನಾರಾಯಣ ಗುರುಗಳ ಬಗ್ಗೆ ಪ್ರಧಾನಿ ಸೇರಿದಂತೆ ಎಲ್ಲರಿಗೂ ಗೌರವ ಇದೆ: ಎಸ್.ಅಂಗಾರ

ಕೋವಿಡ್ ಪ್ರಕರಣಗಳ ಪ್ರಮಾಣ ಬೆಂಗಳೂರಿನಲ್ಲಿ ಇಳಿಕೆಯಾಗುತ್ತಿದೆ. ಬೇರೆ ಜಿಲ್ಲೆಗಳಲ್ಲಿ ನಿಧಾನವಾಗಿ ಏರುತ್ತಿದೆ. ಆದರೆ ಆಸ್ಪತ್ರೆ ದಾಖಲಾತಿ 1-2% ಮಾತ್ರ ಇರುವುದರಿಂದ ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚು ಒತ್ತಡ ಇಲ್ಲ. ಓಮಿಕ್ರಾನ್ ವೈರಾಣು ಇದ್ದರೂ ರೋಗ ತೀವ್ರತೆ ಇಲ್ಲ. ಕಳೆದೆರಡು ಅಲೆಗಳಿಗೆ ಹೋಲಿಸಿದರೆ ಈ ಅಲೆಯಲ್ಲಿ ಸಾವಿನ ಪ್ರಮಾಣ ಬಹಳ ಕಡಿಮೆ ಇದೆ. ಹಾಗೆಯೇ ಹೊಸ ಪ್ರಕರಣಗಳಿಗಿಂತ ಗುಣಮುಖರಾಗುವವರ ಪ್ರಮಾಣ ಅಧಿಕವಾಗಿದೆ. ಪ್ರಕರಣ ಕಡಿಮೆಯಾಗುತ್ತಿರುವಾಗ ಅತಿ ಕಠಿಣ ನಿಯಮಗಳ ಅಗತ್ಯವಿಲ್ಲ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಹೊಸ ಜಿಲ್ಲಾಸ್ಪತ್ರೆ ನಿರ್ಮಾಣವಾಗಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಗುವುದು. ಸ್ಥಳದ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಹಾಗೆಯೇ ಜಿಲ್ಲಾಡಳಿತ ಕಚೇರಿ ಎಲ್ಲಿರಬೇಕೆಂದು ಜನಪ್ರತಿನಿಧಿಗಳ ಸಹಮತದೊಂದಿಗೆ ತೀರ್ಮಾನಿಸಲಾಗುವುದು. ಈ ಭಾಗದಲ್ಲಿ ಯುವಜನರಿಗೆ ಉದ್ಯೋಗ ನೀಡಲು ಕೈಗಾರಿಕೆ ಆರಂಭಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಬದಲಾವಣೆಯಿಂದ ಸಹಜವಾಗಿ ಕಾರ್ಯಕರ್ತರಿಗೆ, ಬೆಂಬಲಿಗರಿಗೆ ಬೇಸರವಾಗಿರಬಹುದು. ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಇಲ್ಲದಿದ್ದರೂ, ಚಿಕ್ಕಬಳ್ಳಾಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧನಾಗಿದ್ದೇನೆ. ಹಿರಿಯರಾದ ಎಂಟಿಬಿ ನಾಗರಾಜ್ ಅವರ ಸಹಕಾರ ಪಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆಯಲಿದೆ. ಹಾಗೆಯೇ ಎಲ್ಲ ಕ್ಷೇತ್ರಗಳಿಗೆ ಭೇಟಿ ನೀಡಿ ಬಿಜೆಪಿ ಬಲಪಡಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ನಮಗೆ ಗೌರವ ಕೊಟ್ಟಿದ್ದಕ್ಕೆ ಜಾರಕಿಹೊಳಿಗೆ ಅಭಿನಂದನೆ: ಎಚ್‍ಡಿಕೆ 

ರಾಜಕಾರಣವೇ ಬೇರೆ, ವಿಶ್ವಾಸವೇ ಬೇರೆ!
ಯಾರೇ ಶಾಸಕರು ಮತ್ತೊಂದು ಪಕ್ಷದವರ ಜೊತೆ ಎದುರಿಗೆ ಸಿಕ್ಕಾಗ ಮಾತನಾಡಿದರೆ ಪಕ್ಷ ಸೇರುತ್ತಾರೆ ಎಂದು ಹೇಳುವುದಲ್ಲ. ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕಾಂಗ್ರೆಸ್ ಅವರು ಚಾಲ್ತಿಯಲ್ಲಿರಲು ಹೇಳಿಕೆ ನೀಡುತ್ತಿದ್ದಾರೆ. ಯಾರೂ ಕೂಡ ನಾಲ್ಕು, ಆರು ತಿಂಗಳಲ್ಲಿ ಮುಖ್ಯಮಂತ್ರಿಗಳನ್ನು ಬದಲಿಸುವುದಿಲ್ಲ. ಇವು ಸಂಪೂರ್ಣ ಗಾಳಿ ಸುದ್ದಿ ಎಂದು ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *