ಮಂಗಳೂರಿನ ಹಲವೆಡೆ ಬಸ್ಸುಗಳ ಮೇಲೆ ಕಲ್ಲು ತೂರಾಟ

Public TV
1 Min Read

ಮಂಗಳೂರು: ಭಾರತ್ ಬಂದ್ ನಡುವೆಯೂ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ದಾಂದಲೆ ನಡೆಸಿರುವ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ವರದಿಯಾಗಿದೆ.

ಭಾರತ್ ಬಂದ್ ನಡುವೆಯೂ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳಿಗೆ ಕದ್ರಿ ಠಾಣೆಯ ಮುಂಭಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ದಾಂದಲೆ ನಡೆಸಿ, ಜ್ಯೋತಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹೊತ್ತಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಇದಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ಕೋಡಾಜೆಯಲ್ಲಿನ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಹಂಚಿ ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ.

ಮಂಗಳೂರಿನ ಕದ್ರಿ ಶಿವಭಾಗ್ ನಲ್ಲಿ ಬಂದ್ ನಡುವೆಯೂ ಸೇವೆ ನೀಡುತ್ತಿದ್ದ ಹೋಟೆಲ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಯೋರ್ವ ಮುಖಕ್ಕೆ ಹೆಲ್ಮೆಟ್ ಧರಿಸಿ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾನೆ. ಕಲ್ಲು ತೂರಾಟ ನಡೆಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಭಾರತ್ ಬಂದ್‍ಗೆ ವರ್ತಕರು ಹಾಗೂ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಸೋಮವಾರದ ಬಂದ್ ದಿನ ಎಲ್ಲಾ ಅಂಗಡಿಗಳು 1 ಗಂಟೆ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುವುದರ ಬಗ್ಗೆ ಪೋಸ್ಟರ್ ಗಳನ್ನು ಹಾಕಿಕೊಂಡಿದ್ದರು. ಹೀಗಾಗಿ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಬಂದೋಬಸ್ತ್ ಕಲ್ಪಿಸಿಕೊಡಲಾಗಿದೆ. ಅಲ್ಲದೇ ಖಾಸಗಿ ಸೇರಿದಂತೆ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಕಲ್ಲಡ್ಕದಲ್ಲಿ ಟೈರ್ ಹೊತ್ತಿಸಿ ಸಂಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದವರನ್ನು ಚದುರಿಸಿ, ಉರಿಯುತ್ತಿದ್ದ ಟೈರ್ ಬೆಂಕಿಯನ್ನು ಪೋಲಿಸರು ನಂದಿಸಿದ್ದಾರೆ. ಕುಲಶೇಖರ್ ಬಳಿಯು ಟೈರ್ ಗೆ ಬೆಂಕಿ ಹತ್ತಿಸುವ ಯತ್ನವನ್ನು ವಿಫಲಗೊಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹೆದ್ದಾರಿ ಉದ್ದಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *