ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥ ಪಡಿಸಲಾಗಿದೆ. ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಲ್ಲಿಯೇ ಮುಂದುವರಿಸುವಂತೆ ನ್ಯಾಯಾಧೀಶ ಎ.ಕೆ.ಸಿಕ್ರಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದೆ.
ರಾಚೇನಹಳ್ಳಿ, ಶ್ರೀರಾಂಪುರ, ಉತ್ತರಹಳ್ಳಿ, ನಾಗರಭಾವಿ, ಅರೇಕೆರೆಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮೂಲಕ ಬಿ.ಎಸ್.ಯಡಿಯೂರಪ್ಪ ಅವರು ಭೂ ಕಬಳಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿರಾಜಿನ್ ಬಾಷಾ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಪೀಠ ಈ ಸಂಬಂಧ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಹಂತದಲ್ಲಿರುವುದರಿಂದ ಅಲ್ಲೇ ಮುಂದುವರಿಸುವಂತೆ ಆದೇಶ ನೀಡಿದೆ.
ಏನಿದು ಪ್ರಕರಣ?:
ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಐದು ಪ್ರತ್ಯೇಕ ಡಿನೋಟಿಫಿಕೇಷನ್ ಪ್ರಕರಣಗಳ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಸಿರಾಜಿನ್ ಬಾಷಾ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಂದಿನ ರಾಜ್ಯಪಾಲ ಹಂಸರಾಜ್ ಭಾರಧ್ವಜ್ ಅನುಮತಿ ಪಡೆದು ತನಿಖೆ ಆರಂಭಿಸಿತ್ತು. ಈ ನಡುವೆ ರಾಜ್ಯಪಾಲರು ಅನುಮತಿ ಕಾನೂನು ಬಾಹಿರ ಎಂದು ಆರೋಪಿಸಿದ್ದ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ನೂತನ ರಾಜ್ಯಪಾಲರ ಒಪ್ಪಿಗೆ ಪಡೆದು ತನಿಖೆ ಮುಂದುವರಿಸುವಂತೆ ಸೂಚಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿದಾರರಾದ ಸಿರಾಜಿನ್ ಬಾಷಾ ಮತ್ತು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಸತ್ಯಕ್ಕೆ ಸಾವಿಲ್ಲ-ಸುಳ್ಳಿಗೆ ಉಳಿಗಾಲವಿಲ್ಲ ಎಂಬಂತೆ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬಸ್ಥರ ವಿರುದ್ಧ ಸಿರಾಜಿನ್ ಬಾಷಾ ಹಾಕಿದ್ದ ಸುಳ್ಳಿನ, ರಾಜಕೀಯ ಷಡ್ಯಂತ್ರದಿಂದ ಕೂಡಿದ ದೂರುಗಳನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿ ಇತಿಶ್ರೀ ಹಾಡಿದೆ. ಇದು ಬಿ.ಎಸ್.ಯಡಿಯೂರಪ್ಪ ಅವರಿಗೆ ಸತ್ಯದ ಹಾದಿಗೆ ಸಂದ ಜಯ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದೆ.
ಸತ್ಯಕ್ಕೆ ಸಾವಿಲ್ಲ-ಸುಳ್ಳಿಗೆ ಉಳಿಗಾಲವಿಲ್ಲ ಎಂಬಂತೆ ಶ್ರೀ ಯಡಿಯೂರಪ್ಪನವರ ಹಾಗೂ ಕುಟುಂಬದವರ ವಿರುದ್ಧ ಸಿರಾಜಿನ್ ಬಾಷಾ ಹಾಕಿದ್ದ ಸುಳ್ಳಿನ, ರಾಜಕೀಯ ಷಡ್ಯಂತರದಿಂದ ಕೂಡಿದ ದೂರುಗಳನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿ ಇತಿಶ್ರೀ ಹಾಡಿದೆ. ಯಡಿಯೂರಪ್ಪನವರ ಸತ್ಯದ ಹಾದಿಗೆ ಸಂದ ಜಯ ಇದು..
— BJP Karnataka (@BJP4Karnataka) December 4, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv