ಬೆಂಗಳೂರು: ಮನೆಯಲ್ಲಿದ್ದ ಒಂಟಿ ಮಹಿಳೆಯನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಚಾಮರಾಜಪೇಟೆಯ ಐದನೇ ಮುಖ್ಯರಸ್ತೆಯಲ್ಲಿ ನಡೆದಿದೆ.
50 ವರ್ಷದ ವಿಜಯಮ್ಮ ಕೊಲೆಯಾದ ಮಹಿಳೆ. ವಿಜಯ ದಂಪತಿಗೆ ಮಕ್ಕಳಿಲ್ಲದ ಕಾರಣ ಯುವತಿಯನ್ನ ದತ್ತು ಪಡೆದು ಸಾಕಿಕೊಂಡಿದ್ದರು. ಸಾಕು ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ಆದರೆ ಮನೆಯಲ್ಲಿ ಒಪ್ಪುವುದಿಲ್ಲ ಎಂದು ಒಂದು ವಾರದ ಹಿಂದೆ ಮನೆಯಿಂದ ಓಡಿ ಹೋಗಿ ಮದುವೆಯಾಗಿದ್ದಳು. ಈ ವಿಚಾರದಲ್ಲಿ ಮೃತ ವಿಜಯಮ್ಮ ಆಕ್ರೋಶಗೊಂಡಿದ್ದರು ಎನ್ನಲಾಗಿದೆ.
ಮದುವೆ ಆದ ಬಳಿಕ ಮಗಳು ತಾಯಿ ವಿಜಯಳಿಗೆ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಳೆಂದು ತಿಳಿದು ಬಂದಿದೆ. ಆದರೆ ಮದುವೆ ಬಳಿಕ ಮಗಳು ಅಳಿಯ ಇಬ್ಬರು ವಿಜಯಮ್ಮನ ಮನೆಯಲ್ಲಿ ಇದ್ದರು. ಹೀಗಾಗಿ ದತ್ತು ಮಗಳು ಮತ್ತು ಅಳಿಯನ ಮೇಲೆ ಅನುಮಾನಗಳು ವ್ಯಕ್ತವಾಗಿದ್ದು, ದತ್ತು ಮಗಳೇ ತಾಯಿಯನ್ನ ಕೊಂದಿರಬಹುದು ಎಂದು ಪೋಲಿಸರು ಶಂಕಿಸಿದ್ದಾರೆ.
ಈ ಘಟನೆ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಪೊಲೀಸರು ದತ್ತು ಮಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.