ಕೊಡಗಿನಲ್ಲಿ ಪ್ರವಾಹ ಪೀಡಿತರ ರಕ್ಷಣೆಗೆ ಕ್ರಮ: ಸಿಎಂ ಕುಮಾರಸ್ವಾಮಿ

Public TV
1 Min Read

ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಪ್ರವಾಹ ಪೀಡಿತರ ರಕ್ಷಣೆಗೆ ಸೂಕ್ತ ಕ್ರಮಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವ ಮಡಿಕೇರಿ ತಾಲೂಕಿನ ಹಟ್ಟಿಹೊಳೆ ಬಳಿಯ ಗ್ರಾಮದ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಲ್ಲಿನ ಜನರನ್ನು ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಖುದ್ದು ಸ್ವತಃ ನಾನೇ ವಾಯುಪಡೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಪ್ರವಾಹದಲ್ಲಿ ಸಿಲುಕಿರುವ ಕೊಡಗು ಜಿಲ್ಲೆಯ ಜನರ ರಕ್ಷಣೆಗೆ ನೆರವು ನೀಡುವಂತೆ ಮಾತುಕತೆ ನಡೆಸಿದ್ದೇನೆ. ಈಗಾಗಲೇ ಜಿಲ್ಲೆಯಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್‍ರವರು ಮೊಕ್ಕಾಮ್ ಹೂಡಿದ್ದಾರೆ. ಸಚಿವರುಗಳು ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆಗೆ ಕ್ರಮ ವಹಿಸುತ್ತಾರೆ ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಖುದ್ದು ಸಿಎಂ ಮಾತಕತೆ ನಡೆಸಿ ಪ್ರಸ್ತುತ ಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ನೆರವು ನೀಡಲು, ಅಗತ್ಯ ಬಿದ್ದಲ್ಲಿ ಗಂಜಿ ಕೇಂದ್ರ ತೆರೆಯಲು ಹಾಗೂ ಇತರ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರವಾಹ ಪರಿಸ್ಥಿತಿ ಉಂಟಾಗಿರುವ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳು ಸಹ ಕೂಡಲೇ ಜಿಲ್ಲೆಗಳಿಗೆ ತೆರಳಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *