ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಸಿದ್ದರಾಮಯ್ಯ

By
2 Min Read

ಬೆಂಗಳೂರು: ರಾಜ್ಯ ಸರ್ಕಾರ (Government of Karnataka) ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದ್ದು, ಮಳೆ (Rain) ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಈಗಾಗಲೇ ಕೆಲವೆಡೆ ಬಿತ್ತನೆ ಪ್ರಾರಂಭವಾಗಿದ್ದು, ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಕೆಲವೆಡೆ ಕುಡಿಯುವ ನೀರಿಗೆ ಸಮಸ್ಯೆಯುಂಟಾಗಿದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬಿತ್ತನೆಗೆ ಸಿದ್ಧ:
ಮಳೆ ಯಾವಾಗ ಬಂದರೂ ಬಿತ್ತನೆ ಮಾಡಲು ತಯಾರಾಗಿದ್ದೇವೆ. ಕೃಷಿ ಇಲಾಖೆ ಬೀಜ, ಗೊಬ್ಬರ ಹಾಗೂ ಔಷಧಿಗಳನ್ನು ಸಂಗ್ರಹಿಸಿ ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.

ಬಜೆಟ್ ನಂತರ ಪರಿಶೀಲನೆ:
ಸಣ್ಣ ಕೈಗಾರಿಕೆಗಳು (Small Industries) ಹಾಗೂ ಕಾಸಿಯಾ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ತಮ್ಮ ಸಮಸ್ಯೆಗಳನ್ನ ತಿಳಿಸಿದ್ದಾರೆ. ಬಜೆಟ್ ಮಂಡನೆಯ ನಂತರ ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಹಸಿದವರ ಕೂಗಿಗೆ ಸಿದ್ದರಾಮಯ್ಯರ ಕಿವಿ ಯಾವಾಗಲೂ ತೆರೆದಿರುತ್ತದೆ: ನಾಡೋಜ ಹಂಪನಾ

ಕೈಗಾರಿಕೆಗಳಿಗೆ 9 ತಿಂಗಳ ವಿದ್ಯುತ್ ತೆರಿಗೆ ವಿಧಿಸಲಾಗಿದೆ. ಇದರಿಂದ ತಮಗೆ ಹೊರೆಯಾಗಿದೆ ಎಂದು ಕೈಗಾರಿಕೋದ್ಯಮಿಗಳು ತಿಳಿಸಿದ್ದಾರೆ. ದರ ಪರಿಷ್ಕರಣೆ ನಮ್ಮ ಸರ್ಕಾರದ ಅವಧಿಯಲ್ಲಿ ಆಗಿದ್ದಲ್ಲ, ಹಿಂದಿನ ಸರ್ಕಾರದ ಅವಧಿಯಲ್ಲಿ ಮಾಡಿದ್ದು. ದರ ಪರಿಷ್ಕರಣೆಯನ್ನ ಪ್ರತಿ ವರ್ಷ ಕೆಇಆರ್‌ಸಿ ಮಾಡುತ್ತದೆ. ದರ ಏರಿಕೆಗೂ ನಮ್ಮ ಸರ್ಕಾರಕ್ಕೂ ಸಂಬಂಧವಿಲ್ಲ. ನಾವು ಕೂಡ ಅವರಿಗೆ ಎಷ್ಟು ಮಾಡಬೇಕೆಂದು ಮನವಿ ಸಲ್ಲಿಸಿರುತ್ತೇವೆ. ಅದೊಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಹೇಳಿದರು.

ಬಡವರ ಕಾರ್ಯಕ್ರಮಕ್ಕೆ ಕೇಂದ್ರದಿಂದ ತೊಂದರೆ:
ಬಡವರ ಕಾರ್ಯಕ್ರಮಗಳಿಗೆ ತೊಂದರೆ ಕೊಡಬೇಕೆಂದು ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದೆ. ಅವರ ಬಳಿ ಲಕ್ಷ ಟನ್‌ಗಟ್ಟಲೆ ಅಕ್ಕಿ ಇದೆ. ಅದನ್ನ ಖಾಸಗಿಯವರಿಗೆ ಹರಾಜು ಮಾಡ್ತಿದ್ದಾರೆ ಹೊರತು ರಾಜ್ಯಗಳಿಗೆ ಕೊಡುತ್ತಿಲ್ಲ. ಪ್ರತಿ ಕೆಜಿ ಅಕ್ಕಿಗೆ 36.70 ರೂ. ಕೊಡಲು ಒಪ್ಪಿದರೂ ಅಕ್ಕಿ ಕೊಡು‌ತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡೋದು ಬೇಡ – ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ

ಅಕ್ಕಿ ಖರೀದಿಗೆ ಸರ್ಕಾರಿ ಏಜೆನ್ಸಿಗಳೊಂದಿಗೆ ಮಾತುಕತೆ
5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ 1ರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ. ಎಲ್ಲ ರಾಜ್ಯದವರಿಂದಲೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್‌ಸಿಸಿಎಫ್‌ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ. ಈ ಬಗ್ಗೆ ಮಾತುಕತೆ ನಡೆಸಿ ಎಷ್ಟು ಅಕ್ಕಿ? ದರ ಎಷ್ಟು? ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಪಡೆಯಲು ಟೆಂಡರ್ ಕರೆಯಬೇಕು. ಜೋಳ, ರಾಗಿ ವಿತರಣೆ 6 ತಿಂಗಳಿಗಾಗುವಷ್ಟಿದೆ. 2 ಕೆಜಿಯಂತೆ ನೀಡಬಹುದು. ಇನ್ನೂ 3 ಕೆಜಿ ಅಕ್ಕಿ ನೀಡಬೇಕಿದೆ. ಇಡೀ ವರ್ಷ ನೀಡುವಷ್ಟು ರಾಗಿ, ಜೋಳವಿಲ್ಲ ಎಂದು ವಿವರಿಸಿದರು.

Share This Article