ಬುರ್ಹಾನ್ ವಾನಿ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿದ ಯೋಧರು

Public TV
1 Min Read

ಶ್ರೀನಗರ: ಉಗ್ರ ಬುರ್ಹಾನಿ ವಾನಿ ಸಾವಿನ ಬಳಿಕ ಹಿಜ್ಬುಲ್ ಮುಜಾಹಿದ್ದೀನ್ ಉಗ್ರಸಂಘಟನೆಯ ಉತ್ತರಾಧಿಕಾರಿಯಾಗಿದ್ದ ಸಬ್ಜರ್ ಅಹಮದ್ ಭಟ್ ಸೇರಿದಂತೆ ಎರಡು ಪ್ರತ್ಯೇಕ ಘಟನೆಯಲ್ಲಿ 8 ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ.

ಭಾರತೀಯ ಸೇನೆ ಶನಿವಾರ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆಸಿದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇದರಲ್ಲಿ ಓರ್ವ ಬುರ್ಹಾನ್ ವಾನಿ ಉತ್ತರಾಧಿಕಾರಿ ಭಟ್ ಎಂದು ಪೊಲೀಸ್ ಮಹಾನಿರ್ದೇಶಕ ಎಸ್‍ಪಿ ವೈದ್ ಸ್ಪಷ್ಟಪಡಿಸಿದ್ದಾರೆ.

ಸೊಮಿಹ್ ಗ್ರಾಮದ ಟ್ರಾಲ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್‍ನ ಉಗ್ರರು ಇದ್ದಾರೆ ಎಂಬ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಶೋಧ ಕಾರ್ಯ ನಡೆಸಿತ್ತು. ಇಲ್ಲಿನ ಮನೆಯೊಂದರಲ್ಲಿ ಅಡಗಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಯೋಧರು ಕೂಡ ಪ್ರತಿದಾಳಿ ನಡೆಸಿದ್ದು,  ಇಬ್ಬರು ಉಗ್ರರನ್ನು ಬಲಿಪಡೆದುಕೊಳ್ಳುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಅಂತಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಳಿಕ ಕಾಶ್ಮೀರ ಕಣಿವೆಯ ಸುತ್ತಮುತ್ತ ಪ್ರತಿಭಟನೆ ಹಾಗೂ ಕಲ್ಲು ತೂರಾಟ ನಡೆದಿದೆ.

2016ರ ಜುಲೈ 8ರಂದು ಉಗ್ರ ಬುರ್ಹಾನ್ ವಾನಿಯನ್ನು ದಕ್ಷಿಣ ಕಾಶ್ಮೀರದಲ್ಲಿ ಸೇನೆ ಕೊಂದು ಹಾಕಿತ್ತು. ಬುರ್ಹಾನ್ ವಾನಿ ಹತ್ಯೆ ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಎಡೆ ಮಾಡಿಕೊಟ್ಟಿತ್ತು.

ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ ಜಮ್ಮು ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆ ಬಳಿ ಭಾರತೀಯ ಯೋಧರು 6 ಉಗ್ರರನ್ನು ಹತ್ಯೆ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *