ಸೋಂಕಿತನ ಹೇಳಿಕೆ ಮೇಲೆ ಡೌಟ್- ಫೋನ್ ನೆಟ್‌ವರ್ಕ್‌ ಟ್ರ್ಯಾಕ್‍ಗೆ ಉಡುಪಿ ಡಿಸಿ ಆದೇಶ

Public TV
2 Min Read

ಉಡುಪಿ: ನಗರದಲ್ಲಿ ಪತ್ತೆಯಾದ ಕೊರೊನಾ ಸೋಂಕಿತನ ಫೋನ್ ನೆಟ್‌ವರ್ಕ್‌ ಟ್ರ್ಯಾಕ್ ಮಾಡಲು ಉಡುಪಿ ಜಿಲ್ಲಾಡಳಿತ ನಿರ್ಧರಿಸಿದೆ. ಮಣಿಪಾಲ ಕೆಎಂಸಿಯ ಲ್ಯಾಬ್ ಟೆಕ್ನಿಷನ್ ಆಗಿರುವ ಸೋಂಕಿತ ವ್ಯಕ್ತಿ, ಮಾರ್ಚ್ 18ರಂದು ದುಬೈನಿಂದ ಮಂಗಳೂರಿಗೆ ಬಂದು ಇಳಿದಿದ್ದರು.

ಮಂಗಳೂರು ವಿಮಾನ ನಿಲ್ದಾಣದಿಂದ ಟ್ಯಾಕ್ಸಿ ಮೂಲಕ ಮಣಿಪಾಲದಲ್ಲಿರುವ ಮನೆ ಸೇರಿಕೊಂಡಿದ್ದಾರೆ. ಆನಂತರ ನಾನು ಎಲ್ಲೂ ಹೋಗಿಲ್ಲ. ಶೀತ ಕೆಮ್ಮು ಜ್ವರ ಶುರುವಾದ ಬಳಿಕ ನೇರವಾಗಿ ಜಿಲ್ಲಾಸ್ಪತ್ರೆಗೆ ಬಂದಿದ್ದಾಗಿ ಹೇಳಿಕೊಂಡಿದ್ದಾರೆ. ಉಡುಪಿ ಡಿಎಚ್‍ಒ ಜಿಲ್ಲಾಡಳಿತದ ಸಿಬ್ಬಂದಿ, ಪೊಲೀಸರು ಸೋಂಕಿತ ವ್ಯಕ್ತಿಯ ಟ್ರಾವೆಲ್ ಹಿಸ್ಟ್ರಿ ಬಗ್ಗೆ ತರತರನಾಗಿ ವಿಚಾರಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸೋಂಕಿತ ಮಾತ್ರ ಇಷ್ಟನ್ನೇ ಹೇಳಿಕೊಂಡಿದ್ದಾರೆ.

ಕೊರೊನಾ ಸೋಂಕಿತ ವ್ಯಕ್ತಿ ಎಂದು ದೃಢವಾದ ಕೂಡಲೇ ಸೋಂಕಿತನ ಪರಿಚಯಸ್ಥರು, ಸುತ್ತಮುತ್ತಲಿನವರು ಜಿಲ್ಲಾಡಳಿತಕ್ಕೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಐದು ದಿನಗಳಲ್ಲಿ ಸೋಂಕಿತ ವ್ಯಕ್ತಿ ಮಣಿಪಾಲ, ಉಡುಪಿ ಸುತ್ತಮುತ್ತ ಓಡಾಟ ಮಾಡಿದ್ದಾರೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯ ಫೋನ್ ನೆಟ್‌ವರ್ಕ್‌ ಟ್ರ್ಯಾಕ್ ಮಾಡಲು ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್‍ಪಿ ವಿಷ್ಣುವರ್ಧನ್ ಅವರಿಗೆ ಆದೇಶಿಸಿದ್ದಾರೆ.

ದುಬೈನಿಂದ ಮಾರ್ಚ್ 10ರಂದು ಬಂದಿಳಿದಿದ್ದ ಸೋಂಕಿತ ವ್ಯಕ್ತಿಯ ಫೋನ್ ನೆಟ್‌ವರ್ಕ್‌ ಎಲ್ಲೆಲ್ಲಿ ಹರಿದಾಡಿದೆ ಎಂಬ ಬಗ್ಗೆ ಪೊಲೀಸರು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಹೋಂ ಕ್ವಾರಂಟೈನ್‍ನಲ್ಲಿ ಇದ್ದ ಸಂದರ್ಭ ತಾವು ಐದು ದಿನವೂ ಆನ್‍ಲೈನ್ ಮೂಲಕ ಆಹಾರ ತರಿಸಿಕೊಂಡಿರುವುದಾಗಿ ತಿಳಿಸಿದ್ದರು. ಯಾರ ಜೊತೆಯೂ ನೇರವಾಗಿ ಸಂಪರ್ಕ ಮಾಡಿಲ್ಲ ಎಂದು ಹೇಳಿಕೊಂಡಿದ್ದರು. ಆದರೆ ಫೋನ್ ನೆಟ್ವರ್ಕ್ ಟ್ರ್ಯಾಕ್ ಮಾಡಿರುವ ಪೊಲೀಸರಿಗೆ ಸೋಂಕಿತ ವ್ಯಕ್ತಿಯ ಹೇಳಿಕೆ ಮತ್ತು ನೆಟ್ ವರ್ಕ್ ಗೆ ಸಂಬಂಧ ಇದೆಯೋ ಇಲ್ಲವೋ ಎಂದು ಇಂದು ಗೊತ್ತಾಗಲಿದೆ.

ಮೂಲತಃ ದಾವಣಗೆರೆ ಜಿಲ್ಲೆಯವರಾದ ಸೋಂಕಿತ ವ್ಯಕ್ತಿ ಮಣಿಪಾಲ ಕೆಎಂಸಿಯಲ್ಲಿ ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದಾರೆ. ಹೋಮ್ ಕ್ವಾರಂಟೈನ್‍ನಲ್ಲಿ ಇದ್ದ ಸಂದರ್ಭದಲ್ಲಿ ಅವರು ಸಾರ್ವಜನಿಕವಾಗಿ ಓಡಾಡಿದ್ದರೆ, ಜನರನ್ನು ಸಂಪರ್ಕಿಸಿದ್ದರೆ, ಅವರಿಗೂ ಸೋಂಕು ತಗಲುವ ಸಾಧ್ಯತೆ ಇದೆ. ಸಂಪರ್ಕ ಮಾಡಿದ ವ್ಯಕ್ತಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದು ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಲ್ಯಾಬ್ ಟೆಕ್ನಿಷನ್ ಆಗಿರುವ ಸೋಂಕಿತ ವ್ಯಕ್ತಿ ಜವಾಬ್ದಾರಿಯುತವಾಗಿ ನಡೆದುಕೊಂಡಿದ್ದರೆ ದೊಡ್ಡ ಅವಘಡ ತಪ್ಪಿದಂತಾಗುತ್ತದೆ. ಉಡುಪಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಪೊಲೀಸರ ಮಾಹಿತಿಗಾಗಿ ಕಾಯುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *