ಪ್ರಧಾನಿ ಮೋದಿ ಲಾಕ್‍ಡೌನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಅಯೋಧ್ಯೆಗೆ ತೆರಳಿದ ಯೋಗಿ

Public TV
1 Min Read

ಲಕ್ನೋ: ದೇಶದಲ್ಲಿ ಕೊರೊನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ್ದಾರೆ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಾಕ್‍ಡೌನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಟೆಂಪಲ್ ರನ್ ನಡೆಸಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಮಂಗಳವಾರ ತಡರಾತ್ರಿ ಅಯೋಧ್ಯೆಗೆ ತಲುಪಿದ್ದರು. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗುವ ಹಿನ್ನೆಲೆಯಲ್ಲಿ ಯೋಗಿ ಅವರು ಇಂದು ಬೆಳಗ್ಗೆ ಶ್ರೀರಾಮನ ವಿಗ್ರಹವನ್ನು ತಾತ್ಕಾಲಿಕವಾಗಿ ನಿರ್ಮಿಸಿದ ದೇವಾಲಯಕ್ಕೆ ಸ್ಥಳಾಂತರಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು ಇಪ್ಪತ್ತರಿಂದ ಮೂವತ್ತು ಜನರು ಭಾಗವಹಿಸಿದ್ದರು ಎಂದು ವರದಿಯಾಗಿದೆ.

ಈ ಕಾರ್ಯಕ್ರಮದ ವೇಳೆ ಯಾವುದೇ ಮಾಧ್ಯಮಗಳಿಗೆ ಅವಕಾಶ ನೀಡಿರಲಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಡಿಯೋ ಹಾಗೂ ಫೋಟೋಗಳು ಹರಿದಾಡುತ್ತಿವೆ. ಅಷ್ಟೇ ಅಲ್ಲದೆ ಸಿಎಂ ಕೆಲವು ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಜೊತೆಗೆ ಅಯೋಧ್ಯೆಯ ಜಿಲ್ಲಾಧಿಕಾರಿ, ಪೊಲೀಸ್ ಮುಖ್ಯಸ್ಥರು ಸೇರಿದಂತೆ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು. ಆದರೆ ಯೋಗಿ ಆದಿತ್ಯನಾಥ್ ಸೇರಿದಂತೆ ಕೆಲವರು ಮಾಸ್ಕ್ ಕೂಡ ಧರಿಸಿರಲಿಲ್ಲ.

ಪ್ರಧಾನಿ ಮೋದಿ ಅವರ ಸೂಚನೆ, ಮನವಿಯನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗಾಳಿ ತೂರಿಬಿಡ್ರಾ? ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಶ್ರೀರಾಮನ ಮೂರ್ತಿಯನ್ನು ಸ್ಥಳಾಂತರಿಸವುದು ಅಗತ್ಯವಿತ್ತೇ ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಏಪ್ರಿಲ್ ತಿಂಗಳ ಮೊದಲ ವಾರದಂದು ಮೊದಲ ಸಭೆ ಕರೆಯಲಾಗಿದೆ. ಈ ಸಭೆಯನ್ನು ದೇವಸ್ಥಾನ ನಿರ್ಮಾಣ ಸಮಿತಿ ಮುಂದೂಡುತ್ತೋ, ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಿಎಂ ಯೋಗಿ ಆದಿತ್ಯನಾಥ್ ಅವರ ಇಂದಿನ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *