ಇಂದು ಉಪರಾಷ್ಟ್ರಪತಿ ಚುನಾವಣೆ – ಸಂಜೆ ಫಲಿತಾಂಶ ಪ್ರಕಟ

Public TV
2 Min Read
– ಎನ್‌ಡಿಎ ಅಭ್ಯರ್ಥಿಗೆ ಗೆಲುವು ಸ್ಪಷ್ಟ
– ಚುನಾವಣೆಯಿಂದ ಹಿಂದೆ ಸರಿದ ಬಿಆರ್‌ಎಸ್, ಬಿಜೆಡಿ

ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ (Vice President) ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ  (NDA) ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ.

ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಸಂಜೆ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ. ಬಹುತೇಕ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರ ಗೆಲುವು ಸ್ಪಷ್ಟವಾಗಿದೆ.ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ | ಮೋದಿ ಸಮ್ಮುಖದಲ್ಲಿ NDA ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ನಾಮಪತ್ರ ಸಲ್ಲಿಕೆ

ಈ ಮಧ್ಯೆ ಬಿಆರ್‌ಎಸ್ ಮತ್ತು ಬಿಜೆಡಿ ಪಕ್ಷಗಳು ಚುನಾವಣೆಯಿಂದ ದೂರ ಉಳಿಯುತ್ತಿರುವುದರಿಂದ ಸಂಖ್ಯಾಬಲದ ಆಧಾರದ ಮೇಲೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರ ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. ರಾಜ್ಯದಲ್ಲಿ ಯೂರಿಯಾ ಕೊರತೆಯಿಂದಾಗಿ ತೆಲಂಗಾಣದ ರೈತರು ಅನುಭವಿಸುತ್ತಿರುವ ಸಮಸ್ಯೆಯನ್ನು ಎತ್ತಿ ತೋರಿಸುವ ಸಲುವಾಗ ತಮ್ಮ ಪಕ್ಷವು ಮತದಾನದಿಂದ ದೂರ ಉಳಿಯಲಿದೆ ಎಂದು ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ ಟಿ ರಾಮರಾವ್ ತಿಳಿಸಿದ್ದಾರೆ. ಇದೇ ವೇಳೆ, ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿ ಬಣ ಎರಡರಿಂದಲೂ ಸಮಾನ ಅಂತರವನ್ನು ಕಾಯ್ದುಕೊಳ್ಳುವ ತನ್ನ ನೀತಿಯ ಭಾಗವಾಗಿ ಮತದಾನದಿಂದ ದೂರವಿರುವ ನಿರ್ಧಾರವನ್ನು ಬಿಜೆಡಿ ತಿಳಿಸಿದೆ.

ರಾಜ್ಯಸಭೆ ಮತ್ತು ಲೋಕಸಭೆಯ ಸದಸ್ಯರು ಮತದಾನದ ಹಕ್ಕು ಹೊಂದಿದ್ದು, ಉಪರಾಷ್ಟ್ರಪತಿಯನ್ನು ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಚುನಾಯಿತರು ರಹಸ್ಯ ಮತದಾನದ ಮೂಲಕ ಆಯ್ಕೆ ಮಾಡುತ್ತಾರೆ. ಇದರರ್ಥ ಸಂಸದರು ತಮ್ಮ ಇಚ್ಛೆಯಂತೆ ಮತ ಚಲಾಯಿಸಬಹುದು. ಹೆಚ್ಚಾಗಿ ಪಕ್ಷದ ಆಧಾರದ ಮೇಲೆ ಮತ ಚಲಾಯಿಸುತ್ತಾರೆ. ಪ್ರಸ್ತುತ ರಾಜ್ಯಸಭೆಯ 239 ಮತ್ತು 542 ಲೋಕಸಭಾ ಸದಸ್ಯರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಇದರ ಪ್ರಕಾರ ಮತದಾರರ ಸಂಖ್ಯೆ 781 ಮತ್ತು ಬಹುಮತಕ್ಕೆ 391 ಮತಗಳ ಅಗತ್ಯವಿದೆ. ಎನ್‌ಡಿಎ 422 ಸಂಸದರನ್ನು ಹೊಂದಿದೆ. ಹೀಗಾಗಿ ಎನ್ ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರ ಗೆಲುವು ಸುಲಭ ಎಂದೇ ಹೇಳಲಾಗಿದೆ. ಇಂಡಿಯಾ ಮೈತ್ರಿಕೂಟ ಸುಪ್ರೀಂಕೋರ್ಟ್ ನಿವೃತ್ತ ನ್ಯಾ. ಬಿ. ಸುದರ್ಶನ್ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದು, ವಿರೋಧ ಪಕ್ಷಗಳ ಜೊತೆಗೆ ಎನ್‌ಡಿಎ ಮಿತ್ರ ಪಕ್ಷದ ಸದಸ್ಯರ ಮತಗಳು ಲಭಿಸಲಿವೆ ಎನ್ನುವ ನಂಬಿಕೆ ಇಟ್ಟಿದೆ. ಇನ್ನು ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ 11 ಸಂಸದರನ್ನು ಹೊಂದಿದೆ. ರಾಜ್ಯಸಭೆಯಲ್ಲಿ ಏಳು ಮತ್ತು ಲೋಕಸಭೆಯಲ್ಲಿ ನಾಲ್ಕು ಸದಸ್ಯರನ್ನು ಹೊಂದಿದೆ.ಇದನ್ನೂ ಓದಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ.9ರಂದು ಚುನಾವಣೆ – ಚುನಾವಣಾ ಆಯೋಗ ಘೋಷಣೆ

 

Share This Article