ಮಡಿಕೇರಿಯಲ್ಲಿ ಉತ್ತಮ ಮಳೆಗಾಗಿ ಭಗಂಡೇಶ್ವರನ ಮೊರೆ

Public TV
1 Min Read

ಮಡಿಕೇರಿ: ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರಾಗಿದ್ರೆ, ಇತ್ತ ಕಳೆದ ಬಾರಿ ಪ್ರವಾಹ ಸೃಷ್ಟಿಯಾಗಿದ್ದ ಮಡಿಕೇರಿಯಲ್ಲಿ ಮಳೆ ಇಲ್ಲದೆ ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯಲ್ಲಿ ಮಳೆಗಾಗಿ ಪೊಲಿಂಕಾನ ಉತ್ಸವ ನಡೆಯಿತು. ಉತ್ತಮ ಮಳೆಯಾಗಲಿ, ಆದರೆ ಕಳೆದ ಬಾರಿಯಂತೆ ಪ್ರಕೃತಿ ವಿಕೋಪ ಸಂಭವಿಸದೆ ಇರಲಿ ಎಂದು ಪ್ರಾರ್ಥಿಸಲಾಯಿತು.

ಪ್ರತಿ ವರ್ಷ ಮಳೆ ಸುರಿದು ತ್ರಿವೇಣಿ ಸಂಗಮ ಭರ್ತಿಯಾದ ನಂತರದ ಕರ್ಕಟಕ ಅಮವಾಸ್ಯೆಯಂದು ಪೊಲಿಂಕಾನ ಅಥವಾ ಬಾಗಿನ ಅರ್ಪಿಸುವ ಕಾರ್ಯಕ್ರಮ ನಡೆಯುತ್ತೆ. ಆದರೆ ಈ ಬಾರಿ ಕೊಡಗಿನಲ್ಲಿ ಉತ್ತಮ ಮಳೆಯಾಗಿಲ್ಲ. ಇಷ್ಟೋತ್ತಿಗೆ ಮಳೆಯಾಗಿ ತ್ರಿವೇಣಿ ಸಂಗಮ ಭರ್ತಿಯಾಗುತ್ತಿತ್ತು. ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಈ ಭಾಗದ ರೈತರು ಕಂಗಾಲಾಗಿದ್ದಾರೆ.

ವಾಡಿಕೆ ಮಳೆ ಬಂದು ಕಾವೇರಿ ಜಲಾಶಯ ಭಾಗದ ರೈತರ ಬದುಕು ಹಸನಾಗಬೇಕು. ಜೀವನಾಡಿ ಕಾವೇರಿ ಭರ್ತಿಯಾಗಬೇಕು ಎನ್ನುವ ಉದ್ದೇಶದಿಂದ ಕೊಡಗಿನ ಪ್ರಸಿದ್ಧ ಪುಣ್ಯಕ್ಷೇತ್ರ ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯಲ್ಲಿ ಯಶಸ್ವಿಯಾಗಿ ಪೊಲಿಂಕಾನ ಉತ್ಸವನ್ನು ಅದ್ಧೂರಿಯಾಗಿ ನಡೆಸಿ, ಉತ್ತಮ ಮಳೆಯಾಗಿ ಕಳೆದ ಬಾರಿಯಂತೆ ಪ್ರಕೃತಿ ವಿಕೋಪ ಸಂಭವಿಸದೆ ಇರಲಿ ಎಂದು ಪ್ರಾರ್ಥನೆ ಸಲ್ಲಿಸಲಾಗಿದೆ.

ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಪೂಜೆ ನಂತರ ಬಾಳೆಕಂಬದಿಂದ ವಿಶೇಷವಾಗಿ ಸಿದ್ಧಗೊಳಿಸಿದ ಉತ್ಸವ ಮಂಟಪದಲ್ಲಿ ಮುತ್ತೈದೆಯರಿಗೆ ನೀಡುವ ಬಳೆ, ಬಿಚ್ಚೋಲೆ, ಅರಿಶಿಣ ಕುಂಕುಮ, ಸೀರೆ, ಕರಿಮಣಿ ಮುಂತಾದವನ್ನು ಇಟ್ಟು ತ್ರಿವೇಣಿ ಸಂಗಮದಲ್ಲಿ ಕಾವೇರಿ ಮಾತೆಗೆ ಅರ್ಪಣೆ ಮಾಡಲಾಯಿತು. ಅಲ್ಲದೆ ಇದೇ ಮಂಟಪಕ್ಕೆ ಚಿನ್ನ ಹಾಗೂ ಬೆಳ್ಳಿಯನ್ನೂ ತೊಟ್ಟಿಲಲ್ಲಿ ಹಾಕಿ ನೀರಿನಲ್ಲಿ ಬಿಡಲಾಗುತ್ತದೆ.

ಉತ್ತಮ ಮಳೆ ಸುರಿಸಿ ಕೃಷಿ ಚಟುವಟಿಕೆ ಸುಭೀಕ್ಷೆಯಾಗಿ ನಡೆಯಲು ಅನುವು ಮಾಡಿಕೊಡಲು ಕಾವೇರಿಗೆ ವಂದಿಸೋದು, ಜೊತೆಗೆ ಮುಂದೆ ಪ್ರವಾಹ ಬಾರದಂತೆ ಬೇಡಿಕೊಳ್ಳುವುದು ಈ ಉತ್ಸವದ ಪ್ರಮುಖ ಉದ್ದೇಶವಾಗಿದೆ.

ನೂರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರು ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವದಲ್ಲಿ ಭಾಗಿಯಾಗಿದರು. ಹಿಂದಿನಿಂದಲೂ ಕೂಡ ಮಳೆ ಹೆಚ್ಚಾದಾಗ ಕಾವೇರಿಯ ಮಡಿಲು ಭಾಗಮಂಡಲದಲ್ಲಿ ಪೊಲಿಂಕಾನ ಉತ್ಸವ ಆಚರಿಸಿಕೊಂಡು ಬರಲಾಗುತ್ತಿದ್ದು, ಪೊಲಿಂಕಾನ ಉತ್ಸವ ಮಹತ್ವವನ್ನು ಕೂಡ ಪಡೆದುಕೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *