ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹೇಳಿದ್ದಾರೆ.
ಇಂದು ನಡೆದ ಜೆಡಿಎಸ್ನ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾವು ಎಷ್ಟು ಸೀಟು ಗೆಲ್ತೀವಿ ಎಂಬುದು ಮುಖ್ಯವಲ್ಲ, ಕಾಂಗ್ರೆಸ್ ಜೊತೆ ಸೇರಿ ಬಿಜೆಪಿ ಹಿನ್ನಡೆಗೆ ನಾವು ಮುಂದಾಗಬೇಕು. ನಮ್ಮ ಗುರಿ ಕೇವಲ ಬಿಜೆಪಿಯನ್ನು ಸೋಲಿಸುವುದು ಮಾತ್ರ. ಇದನ್ನು ಎಲ್ಲರೂ ಮನಸ್ಸಿನಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಬಿಜೆಪಿ ವಿರುದ್ಧ ಕಹಳೆ ಊದಿದ್ದಾರೆ.
ಈ ವೇಳೆ ಮಾತನಾಡಿದ ಅವರು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ನಮ್ಮಲ್ಲಿರುವವರೇ ಕಾರಣ, ಆದಷ್ಟು ಬೇಗ ಅನ್ಯಾಯ ಮಾಡಿದವರನ್ನು ಪಕ್ಷದಿಂದ ಹೊರ ಹಾಕುವುದಾಗಿ ಹೇಳಿದ್ದಾರೆ.
ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಭಾಗಗಳಲ್ಲಿ ಹಾನಿಯಾಗಿದೆ. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಜಿಲ್ಲಾಡಳಿತದಲ್ಲಿರುವ 5 ಕೋಟಿ ಹಣವನ್ನು ಬಳಕೆ ಮಾಡಲು ಸೂಚಿಸಲಾಗಿದೆ. ಮಳೆಹಾನಿಯ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಈ ವೇಳೆ ತಿಳಿಸಿದ್ದಾರೆ.
ಮತ್ತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪರ ಬ್ಯಾಟಿಂಗ್ ಮಾಡಿದ ಅವರು, ಚುನಾವಣೆ ಉತ್ಸಾಹದಲ್ಲಿ ಒಂದೇ ದಿನದಲ್ಲಿ ರೈತರ ಸಾಲಮನ್ನಾ ಮಾಡ್ತೀವಿ ಅಂತ ಹೇಳಿದ್ರು, ಆದ್ರೆ 37 ಸೀಟು ಪಡ್ಕೊಂಡು ಹೇಗೆ ಸಾಲಮನ್ನಾ ಮಾಡೋಕೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಾವು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಪಡೆದಿದ್ದೇವೆ. ಯಾವುದೇ ಸ್ವಂತ ನಿರ್ಧಾರ ಕೈಗೊಳ್ಳುವ ಸ್ಥಿತಿಯಲ್ಲಿಲ್ಲ ಹೀಗಾಗಿ ಅವರೊಂದಿಗೆ ಚರ್ಚಿಸಿ ಪರಿಹಾರ ಸೂಚಿಸ್ತೀವಿ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಈಗಾಗಲೇ ರೈತರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆಗೂ ಮಾತುಕತೆ ನಡೆಸಿದ್ದಾರೆ. ಸಾಲಮನ್ನಾ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಎಚ್ಡಿಡಿ ಹೇಳಿದರು.