ರಾಜ್ಯ ಬಜೆಟ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಏನು ಸಿಕ್ಕಿದೆ? ಹೊಸ ಯೋಜನೆಗಳು ಏನು?

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ನಲ್ಲಿ 2018-19ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ 425 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಡಿಸಿದ್ದಾರೆ.

ಹೊಸ ಯೋಜನೆಗಳು
ಮಹಾಕವಿ ಕುವೆಂಪುರವರ ಮೈಸೂರಿನ ನಿವಾಸ `ಉದಯರವಿ’ಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಿಸಿ ಅಭಿವೃದ್ಧಿ ಪಡಿಸುವುದು. ಮಹಾಕವಿಯ ದರ್ಶನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಸ್ಮಾರಕದ ಉದ್ದೇಶ.

ಭಾರತದ ಗ್ರಾಮೀಣ ಜನಪದ ಮತ್ತು ಸಾಂಸ್ಕೃತಿಕ ಕಲೆಗಳನ್ನು, ಕರ್ನಾಟಕದ ಜನರಿಗೆ ಹಾಗೂ ಕನ್ನಡ ನಾಡಿನ ಜನಪದ ಸಂಸ್ಕೃತಿಯನ್ನು ಇಡೀ ಭಾರತಕ್ಕೆ ಪರಿಚಯಿಸುವ `ಜನಪದ ಸಾಂಸ್ಕೃತಿಕ ಭಾರತ’ ಕಾರ್ಯಕ್ರಮವನ್ನು ರೂಪಿಸಿ ಅನುಷ್ಠಾನ.


ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಅಕಾಡೆಮಿಗಳು, ಪ್ರಾಧಿಕಾರಗಳು ಪ್ರಕಟಿಸಿರುವ ಪುಸ್ತಕಗಳನ್ನು ನಾಡಿನ ಜನತೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಿ ಪುಸ್ತಕ ಸಂಸ್ಕೃತಿ ಬೆಳೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ `ಪುಸ್ತಕ ಜಾಥಾ’ ಕಾರ್ಯಕ್ರಮವನ್ನು 1.5 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

ವಿವಿಧ ಅಕಾಡೆಮಿಗಳು ಮತ್ತಷ್ಟು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಅಕಾಡೆಮಿಗಳಿಗೆ ನೀಡುತ್ತಿರುವ ಅನುದಾನದ ಹೆಚ್ಚಳ.

ಗಡಿ ಪ್ರದೇಶ ಅಭಿವೃದ್ಧಿ ಮಂಡಳಿ ಮೂಲಕ 50 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು.

ಸಮಗ್ರ ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನವಾಗಿ ಅಧ್ಯಯನ ಪೀಠ ಸ್ಥಾಪನೆ.

ಕನ್ನಡ ತಂತ್ರಾಂಶ ಅಭಿವೃದ್ಧಿ ಹಾಗೂ ಕನ್ನಡ ತಾಂತ್ರಿಕ ವಿಷಯಗಳಲ್ಲಿ ಸಂಶೋಧನೆ ನಡೆಸುವ ತಾಂತ್ರಿಕ ವಿದ್ಯಾರ್ಥಿಗಳಿಗೆ ಫೆಲೋಷಿಪ್ ನೀಡುವುದು.

ಕನ್ನಡದ ನವೋದಯ ಕಾವ್ಯದ ಪ್ರವರ್ತಕ ಗೋಪಾಲಕೃಷ್ಣ ಅಡಿಗರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ `ಕಟ್ಟುವೆವು ನಾವು ಹೊಸ ನಾಡೊಂದನ್ನು’ ಎನ್ನುವ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು.

ವೃತ್ತಿ ರಂಗಭೂಮಿಯ ಸಮಗ್ರ ಅಧ್ಯಯನ, ಸಂಶೋಧನೆ ಮತ್ತು ರಂಗ ಶಿಕ್ಷಣಕ್ಕೆ ಅನುಕೂಲವಾಗುವಂತೆ ದಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ಕೇಂದ್ರದ ಪ್ರಾರಂಭ.

Share This Article
Leave a Comment

Leave a Reply

Your email address will not be published. Required fields are marked *