ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಎರಡೂವರೆ ಲಕ್ಷ ಕೋಟಿ ರೂ. ಅನುದಾನ ಏನಾಯ್ತು: ಸಿದ್ದರಾಮಯ್ಯಗೆ ಅಮಿತ್ ಶಾ ಪ್ರಶ್ನೆ

Public TV
2 Min Read

ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳ ಅಭಿವೃದ್ಧಿಗೆ ಕೇಂದ್ರ ಸಕಾರವು ಒಟ್ಟು ಎರಡೂವರೆ ಲಕ್ಷ ಕೋಟಿ ರೂ.ಗಳ ಅನುದಾನವನ್ನು ನೀಡಿದೆ. ಆದರೆ ಒಂದೂವರೆ ಲಕ್ಷ ಕೋಟಿ ರೂ. ಹಣ ಖರ್ಚಾಗಿರೋದಕ್ಕೆ ದಾಖಲೆಗಳೇ ಇಲ್ಲ. ಪ್ರತಿ ಪೈಸೆಯನ್ನು ಕರ್ನಾಟಕ ವಿಕಾಸಕ್ಕೆ ಕೊಟ್ಟಿದ್ದೇವೆ. ಆದ್ರೆ ರಾಜ್ಯ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮಿತ್ ಶಾ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

 

ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಮಾಜಿ ಮುಖ್ಯ ಮಂತ್ರಿ ಬಿಎಸ್‍ವೈ ಅವರಿಗೆ ಹಸಿರು ಶಾಲು ಹೊದಿಸಿ, ರೈತ ಕುಳಿತ ಎತ್ತಿನ ಬಂಡಿ ಮಾದರಿಯ ಪರಿವರ್ತನಾ ರಥಯಾತ್ರೆಗೆ ಅಮಿತ್ ಶಾ ಚಾಲನೆ ನೀಡಿದರು.

ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 75 ದಿನಗಳ ಕಾಲ ಪರಿವರ್ತನಾ ಯಾತ್ರೆ ರಾಜ್ಯಾದ್ಯಂತ ಸಂಚಾರವನ್ನು ನಡೆಸಿ ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೆಸೆಯಲಿದೆ ಎಂದರು.

ಈ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಪುನರುಚ್ಚರಿಸಿದ ಶಾ, ರಾಜ್ಯದಲ್ಲಿ ನಡೆಯುವ ಪರಿವರ್ತನಾ ಯಾತ್ರೆ ಕೇವಲ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಬದಲಿಸಲು ಮಾತ್ರ ಕೈಗೊಂಡಿಲ್ಲ. ರಾಜ್ಯದ ಸ್ಥಿತಿಯನ್ನು ಬದಲಾಯಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

 

ದೇಶದಲ್ಲಿಯೇ ಕರ್ನಾಟಕ ರಾಜ್ಯ ಸರ್ಕಾರವು ಭ್ರಷ್ಟಾಚಾರದ ನಡೆಸುವುದರಲ್ಲಿ ಮೊದಲ ಸ್ಥಾನ ಪಡೆದಿದೆ. ಸಿದ್ದರಾಮಯ್ಯ ಸಂಪುಟದ ಸಚಿವರ ಮೇಲೆ ಭ್ರಷ್ಟಾಚಾರ ಆರೋಪಗಳಿವೆ. ರಾಜ್ಯದ ಸಚಿವರ ಸಂಪತ್ತು, ಡೈರಿ ಸಿಕ್ಕಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಭ್ರಷ್ಟಾಚಾರ ಹಿನ್ನೆಲೆ ಹೊಂದಿರುವ ಸಿದ್ದರಾಮಯ್ಯ ಸರ್ಕಾರವನ್ನು ತೊಲಗಿಸಬೇಕಿದೆ ಎಂದು ಗುಡುಗಿದರು.

ಬಿಜೆಪಿ ಸರ್ಕಾರವು ದೇಶಾದ್ಯಂತ ಪಾರದರ್ಶಕ ಆಡಳಿತ ಕೊಡುವ ಪ್ರಯತ್ನ ಮಾಡಿದೆ. ಕಳೆದ ಐದು ವರ್ಷ ಅವಧಿಯಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿಯೇ ಆಗಿಲ್ಲ. ಸ್ಟೀಲ್ ಬ್ರಿಡ್ಜ್ ನಿರ್ಮಾಣ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ. ಸಿದ್ದರಾಮಯ್ಯ ಸರ್ಕಾರ ಕನ್ನಡ ರಾಜ್ಯೋತ್ಸವದ ಬಗ್ಗೆ ಉತ್ಸಾಹ ಇಲ್ಲ. ಆದರೆ ಅವರಿಗೆ ನವೆಂಬರ್ 10 ರಂದು ಟಿಪ್ಪು ಜಯಂತಿ ಆಚರಣೆಗೆ ಉತ್ಸಾಹ ಇದೆ. ಮತ ಬ್ಯಾಂಕ್‍ಗಾಗಿ ಕಾಂಗ್ರೆಸ್ ಟಿಪ್ಪು ಜಯಂತಿ ಆಚರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶಪ್ರೇಮಿ ಕಾರ್ಯಕರ್ತರ ಹತ್ಯೆಯಾಗಿದೆ. ಇದು ಅತ್ಯಂತ ನೋವಿನ ಸಂಗತಿ. ಇದರ ಬಗ್ಗೆ ಏಕೆ ಸಿದ್ದರಾಯ್ಯ ಮಾತಾಡಲ್ಲ ಎಂದು ಪ್ರಶ್ನಿಸಿದರು. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರಿಗೆ ದೇಶ ಹಾಗೂ ರಾಜ್ಯದ ಬಗ್ಗೆ ಚಿಂತೆಯಿಲ್ಲ. ಅದ್ದರಿಂದಲೇ ಕೊಲೆ ಆರೋಪಿಗಳ ಮೇಲಿನ ಮೊಕದ್ದಮೆಗಳನ್ನು ಸರ್ಕಾರ ವಾಪಸ್ ಪಡೆದಿದೆ. ಇದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನಿಕ ಸ್ಥಾನಮಾನ ನೀಡಲು ಮುಂದಾಯ್ತು. ಆದರೆ ಕಾಂಗ್ರೆಸ್ ಈ ವಿದೇಯಕಕ್ಕೆ ಬೆಂಬಲ ನೀಡಲಿಲ್ಲ ಎಂದು ಆರೋಪಿಸಿದರು.

 

 

Share This Article
Leave a Comment

Leave a Reply

Your email address will not be published. Required fields are marked *