ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ನೀಡಿರುವ ವರ್ಕ್ ಆರ್ಡರ್ ರದ್ದುಪಡಿಸಿ: CWFI ಆಗ್ರಹ

Public TV
2 Min Read

ಬೆಂಗಳೂರು: ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನೀಡಿರುವ ವರ್ಕ್ ಆರ್ಡರ್ ನ್ನು ಕೂಡಲೇ ರದ್ದುಪಡಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್(CWFI) ಆಗ್ರಹಿಸಿದೆ.

ರಾಜ್ಯದಲ್ಲಿರುವ 30 ಲಕ್ಷ ಕಟ್ಟಡ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಇತ್ತೀಚೆಗೆ ಕಟ್ಟಡ ಕಾರ್ಮಿಕ ಮಂಡಳಿ ಪ್ರತಿ ಡೋಸ್ ಗೆ 780 ರೂ. ದರ ನಿಗದಿಪಡಿಸಿತ್ತು. ಇದನ್ನು ವಿರೋಧಿಸಿ ಕಟ್ಟಡ ಕಾರ್ಮಿಕ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು. ಅಲ್ಲದೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಮಿಕ ಸಚಿವರು ಹಾಗೂ ಹಿರಿಯ ಕಾರ್ಮಿಕ ಅಧಿಕಾರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟ ಸೆಸ್ ಹಣವನ್ನು ರಾಜ್ಯದ 400 ಖಾಸಗಿ ಆಸ್ಪತ್ರೆಗಳಿಗೆ ನೀಡುವ ತೀರ್ಮಾನ ಕೈ ಬಿಡುವಂತೆ ಒತ್ತಾಯಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 851 ಹೊಸ ಕೊರೊನಾ ಕೇಸ್- 790 ಡಿಸ್ಚಾರ್ಜ್, 15 ಸಾವು

ಕಾರ್ಮಿಕರ ಹೋರಾಟದಿಂದ ಕಲ್ಯಾಣ ಮಂಡಳಿ ತನ್ನ ತೀರ್ಮಾನದಿಂದ ಹಿಂದೆ ಸರಿದಿದ್ದು, ಎಲ್ಲ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೂ ಸರ್ಕಾರದ ವತಿಯಿಂದಲೇ ಉಚಿತ ಲಸಿಕೆ ನೀಡುವುದಾಗಿ ಮಾಧ್ಯಮದಲ್ಲಿ ಪ್ರಕಟವಾಗಿದೆ, ಇದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ಈಗಾಗಲೇ ಬೆಂಗಳೂರು ಆರು ಕಾರ್ಮಿಕ ಉಪವಿಭಾಗ ವ್ಯಾಪ್ತಿಯಲ್ಲಿ 2 ಲಕ್ಷ ಡೋಸ್ ಲಸಿಕೆಗಳನ್ನು ನೀಡಲು ಮಂಡಳಿಯಿಂದ 15.60 ಕೋಟಿ ರೂ. ವರ್ಕ್ ಆರ್ಡರ್ ನೀಡಲಾಗಿದೆ. ಮಂಡಳಿಯಿಂದ ನೀಡಲಾದ ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ಕಾರ್ಮಿಕರ ಫೆಡರೇಶನ್ ಒತ್ತಾಯಿಸಿದೆ.

ಈಗಾಗಲೇ ಕೊರೊನಾ ಸಂಕಷ್ಟಕ್ಕೀಡಾದ ಕಟ್ಟಡ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ನೀಡುವ ನೆಪದಲ್ಲಿ ಸಾವಿರಾರು ಕೋಟಿ ರೂ. ಹಣವನ್ನು ವ್ಯಯ ಮಾಡುವ ಮೂಲಕ ಕಾರ್ಮಿಕ ಸಚಿವರು, ಮಂಡಳಿ ಅಧಿಕಾರಿಗಳು, ಕಾರ್ಮಿಕ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರ ನಡೆಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದರ ವಿರುದ್ಧ ಮತ್ತು ಮಂಡಳಿಯ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 20ರಂದು ಮುಖ್ಯಮಂತ್ರಿ ಮನೆ ಚಲೋ ಹೋರಾಟವನ್ನು ಇತರೆ ಕಾರ್ಮಿಕ ಸಂಘಗಳ ಜೊತೆ ಸೇರಿ ಫೆಡರೇಶನ್ ಸಂಘಟಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *