ವಿಶ್ವಾಸಮತ ಯಾಚನೆಗೆ ಸಮಯ ಕೋರಿದ ಸಿಎಂ – ಇತ್ತ ಶಾಸಕರೊಂದಿಗೆ ಬಿಎಸ್‍ವೈ ಚರ್ಚೆ

Public TV
1 Min Read

ಬೆಂಗಳೂರು: ಇಂದಿನ ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚನೆಗೆ ಸಮಯ ಕೋರಿದ ಬೆನ್ನಲ್ಲೇ ಬಿ.ಎಸ್. ಯಡಿಯೂರಪ್ಪ ತಮ್ಮ ಶಾಸಕರೊಂದಿಗೆ ಚರ್ಚೆ ಮಾಡುತ್ತಿದ್ದಾರೆ.

ಸದನದಲ್ಲಿ ಸಿಎಂ ಅವರು ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು ಬಂದಿಲ್ಲ. ಹಲವು ಶಾಸಕರ ಕೆಲ ನಿರ್ಣಯಗಳಿಂದ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ಆದ್ದರಿಂದ ನಾನು ವಿಶ್ವಾಸ ಮತ ಮಂಡನೆ ಮಾಡಲು ತೀರ್ಮಾನಿಸಿದ್ದೇನೆ. ಇದನ್ನು ಸದನದ ಸದಸ್ಯರ ಗಮನಕ್ಕೆ ತರುತ್ತಿದ್ದೇನೆ. ನಾನು ಎಲ್ಲದಕ್ಕೂ ತಯಾರಾಗಿ ಬಂದಿದ್ದು, ಸದನದ ಮುಖಾಂತರ ಒಂದು ಉತ್ತಮ ನಿರ್ಧಾರ ಮಾಡುವ ಅವಕಾಶ ಕೋರುತ್ತಿದ್ದೇನೆ ಎಂದರು. ಇದೇ ಸದನದಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಅವರು ಸಿಎಂ ಮಾತನ್ನು ಕೇಳಿದ್ದ ತಕ್ಷಣ ಕಲಾಪದ ಮಧ್ಯೆ ತಮ್ಮ ಕೊಠಡಿಗೆ ಎದ್ದು ಹೋಗಿದ್ದಾರೆ.

ಕೊಠಡಿಯಲ್ಲಿ ಯಡಿಯೂರಪ್ಪ ಕೆಲ ಬಿಜೆಪಿ ಶಾಸಕರೊಂದಿಗೆ ಚರ್ಚೆ ಮಾಡಿದ್ದಾರೆ. ವಿಶ್ವಾಸ ಮತಕ್ಕೆ ಕೋರಿದ ಹಿನ್ನೆಲೆಯಲ್ಲಿ 14 ದಿನಗಳ ಒಳಗಡೆ ಸ್ಪೀಕರ್ ಯಾವ ದಿನ ಬೇಕಾದರೂ ಅನುಮತಿ ನೀಡಬಹುದು.

ಸಿಎಂ ವಿಶ್ವಾಸಮತಯಾಚನೆಗೆ ಸಮಯ ಕೇಳುತ್ತಾರೆ ಎಂದು ಬಿಜೆಪಿಯವರು ಊಹಿಸಿರಲಿಲ್ಲ. ಸಿಎಂ ಅವರ ನಿರ್ಧಾರ ಬಿಜೆಪಿ ಅಚ್ಚರಿ ಮೂಡಿಸಿದ್ದು, ಸರ್ಕಾರ ರಕ್ಷಣೆಗೆ ದೋಸ್ತಿ ನಾಯಕರು ಏನು ಪ್ಲಾನ್ ಮಾಡಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. ಹೀಗಾಗಿ ಬಿಎಸ್‍ವೈ ಸಿಎಂ ಅವರು ಪ್ಲಾನ್ ಏನು, ನಮ್ಮ ಮುಂದಿನ ನಡೆ ಏನು? ಎಂಬುದರ ಬಗ್ಗೆ ಶಾಸಕರೊಂದಿಗೆ ಚರ್ಚೆ ಮಾಡುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿ ಮಂಗಳವಾರದವರೆಗೂ ಯಥಾಸ್ಥಿತಿಯಲ್ಲಿ ಇರಬೇಕು ಎಂದು ಆದೇಶ ನೀಡಿದೆ. ಈ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಂತಿಲ್ಲ, ಜೊತೆಗೆ ಅವರನ್ನು ಅನರ್ಹ ಮಾಡುವಂತಿಲ್ಲ ಎಂದು ಆದೇಶಿಸಿದೆ. ಕೋರ್ಟಿನ ಇಂದಿನ ಆದೇಶದಿಂದ ದೋಸ್ತಿ ಸರ್ಕಾರ ತಾತ್ಕಾಲಿಕವಾಗಿ ಸೇಫ್ ಆಗಿದೆ. ಇತ್ತ ಅನರ್ಹ ಭೀತಿಯಲ್ಲಿದ್ದ ಅತೃಪ್ತರು ಕೂಡ ರಿಲೀಫ್ ಆಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *