ಕೋಲಾರ: ಯುವತಿ ಪ್ರೇಮ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶ್ರೀನಿವಾಸ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಆಪೆ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಶ್ರೀನಿವಾಸ್ ಕಳೆದ ಕೆಲವು ತಿಂಗಳುಗಳಿಂದ ಯುವತಿಯನ್ನು ಹಿಂಬಾಲಿಸಿಕೊಂಡು ಪ್ರೀತಿಸುತ್ತಿದ್ದನು. ಅಲ್ಲದೆ ತನ್ನ ಪ್ರೇಮವನ್ನು ಯುವತಿಯ ಮುಂದೆ ಪ್ರಸ್ತಾಪಿಸಿದ್ದಾನೆ. ಆದರೆ ಯುವತಿ ಈತನ ಪ್ರೀತಿಯನ್ನು ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ.
ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಶ್ರೀನಿವಾಸ್ ಮಂಕಾಗಿದ್ದನು. ಇದೇ ಕಾರಣಕ್ಕೆ ಮನನೊಂದು ಯುವಕ ಗುರುವಾರ ಮುಂಜಾನೆ ಊರ ಹೊರಗಿನ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv