ಶಿವಮೊಗ್ಗ: ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಎಚ್.ಡಿ.ಕುಮಾರಸ್ವಾಮಿ ನಡುವೆ ಅಲ್ಪಸಂಖ್ಯಾತರ ಓಲೈಕೆಗಾಗಿ ಸ್ಪರ್ಧೆ ನಡೆಯುತ್ತಿದೆ. ಹೀಗಾಗಿ ಕಾಂಗ್ರೆಸ್ ಹಾಗು ಜೆಡಿಎಸ್ ಎರಡು ಪಕ್ಷಗಳು ಮುಸ್ಲಿಮರ ಹೆಸರಿನಲ್ಲಿ ರಾಜಕೀಯ ಮಾಡುತ್ತಿವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಟ್ವೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಹೇಳಿದ್ದನ್ನು ಮಾಡಬೇಕು ಎಂದು ಎಲ್ಲಿಯೂ ಇಲ್ಲ. ಆರ್ಎಸ್ಎಸ್ ಮತ್ತು ವಿಎಚ್ಪಿ ತ್ರಿಶೂಲ ಬಳಕೆ ಹೊಸದೇನಲ್ಲ. ಅದು ಪ್ರತಿವರ್ಷ ನಡೆಯುವ ಕಾರ್ಯಕ್ರಮ ಎಂದು ಸ್ಪಷ್ಟ ಪಡಿಸಿದ್ದಾರೆ. ಇದನ್ನೂ ಓದಿ: ಅಲ್ಪ ಸಂಖ್ಯಾಂತರನ್ನ ಮುಂದಿಟ್ಟುಕೊಂಡು ಸಮಾಜ ವಿಭಜನೆ ಬೇಡ: ಯು.ಟಿ.ಖಾದರ್
ಸಿದ್ದರಾಮಯ್ಯ ಅವರು ಆರ್ಎಸ್ಎಸ್ ಬಗ್ಗೆ ಮಾತನಾಡಿದರೆ, ಅಲ್ಪಸಂಖ್ಯಾತರ ಮತ ಬರುತ್ತದೆ ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಈಗಾಗಿಯೇ ಸಿದ್ದರಾಮಯ್ಯ ಅವರು ಆರ್ಎಸ್ಎಸ್ ಬಗ್ಗೆ ಮಾತನಾಡ ತೊಡಗಿದ್ದಾರೆ. ಆರ್ಎಸ್ಎಸ್ ದೇಶದ ಮೇಲೆ ಬಾಂಬ್ ಹಾಕುವವರನ್ನು ತಯಾರು ಮಾಡುವುದಿಲ್ಲ. ದೇಶವನ್ನು ಪ್ರೀತಿ ಮಾಡುವವರನ್ನು ತಯಾರು ಮಾಡುತ್ತದೆ. ಸಿದ್ದರಾಮಯ್ಯ ಅವರು ಇನ್ನಾದರೂ ಅವರ ಘನತೆಗೆ, ಗೌರವಕ್ಕೆ ತಕ್ಕಂತೆ ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ.