ಪಾಕ್‍ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ಓರ್ವ ಸೈನಿಕ ಹುತಾತ್ಮ

Public TV
1 Min Read
army killed

ಶ್ರೀನಗರ: ಪಾಕಿಸ್ತಾನ ಮತ್ತೆ ತನ್ನ ಕೋತಿ ಬುದ್ಧಿ ತೋರಿಸಿದ್ದು, ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ಭದ್ರತಾ ರೇಖೆ (ಎಲ್‍ಓಸಿ) ಬಳಿ ಪಾಕಿಸ್ತಾನ ಹಾಗೂ ಭಾರತ ಸೈನಿಕರ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧರನ್ನು ರಾಷ್ಟ್ರೀಯ ರೈಫಲ್ಸ್‍ನ ಲ್ಯಾನ್ಸ್ ನಾಯಕ್ ರಾಜೇಂದರ್ ಸಿಂಗ್ ಎಂದು ಗುರುತಿಸಲಾಗಿದೆ. ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್‍ನಲ್ಲಿ ಎಲ್‍ಓಸಿ ಬಳಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೈನಿಕರು ಭಾರತದ ಗಡಿಯ ಹೊರ ಠಾಣೆಗಳನ್ನು ಗುರಿಯಾಗಿಸಿಕೊಂಡು ಭಾರೀ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ರಾಜೇಂದರ್ ಸಿಂಗ್ ಹುತಾತ್ಮರಾಗಿದ್ದಾರೆ.

army 2

ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತವೂ ಸಹ ತೀವ್ರವಾಗಿ ಪ್ರತೀಕಾರ ತೀರಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನ ಸೈನಿಕರು ನಡೆಸಿದ ಗುಂಡಿನ ಚಕಮಕಿ ವೇಳೆ ರಾಷ್ಟ್ರೀಯ ರೈಫಲ್ಸ್‍ನ ಲ್ಯಾನ್ಸ್ ನಾಯಕ್ ರಾಜೇಂದರ್ ಸಿಂಗ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರದ ವೈದ್ಯಕೀಯ ಘಟಕಕ್ಕೆ ಸ್ಥಳಾಂತರಿಸಲಾಯಿತು. ಗಂಭೀರ ಗಾಯವಾಗಿದ್ದರಿಂದ ಅವರು ಹುತಾತ್ಮರಾದರು ಎಂದು ಸೇನೆಯ ಮೂಲಗಳು ತಿಳಿಸಿವೆ.

Indian Army a

ಘಟನೆ ಕುರಿತು ಸೇನೆಯು ಅಧಿಕೃತವಾಗಿ ದೃಢಪಡಿಸಿಲ್ಲ. ಘಟನೆ ನಡೆದ ಸಂದರ್ಭದಲ್ಲಿ ರಾಷ್ಟ್ರೀಯ ರೈಫಲ್ ಸೈನಿಕರು ಎಲ್‍ಓಸಿ ಗಡಿಯ ಮೇಲೆ ಜಾಗೃತೆ ವಹಿಸಿದ್ದರು ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ಸಹ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿ ವೇಳೆ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *