ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಕರಣವೊಂದರಲ್ಲಿ ನ್ಯಾಯಾಂಗ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಭದ್ರಾವತಿಯ ಜಿಂಕ್ ಲೈನ್ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಆರೋಪಿ ಮಂಜುನಾಥ್ 2014ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ. ಈ ಬಗ್ಗೆ ಭದ್ರಾವತಿ ನ್ಯೂಟೌನ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ ಮಂಜುನಾಥ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.
ಆರೋಪಿ ಮಂಜುನಾಥ್ ಕೂಲಿ ಕೆಲಸ ಮಾಡಿಕೊಂಡು ಜಿಂಕ್ ಲೈನ್ ಬಡಾವಣೆಯಲ್ಲಿ ವಾಸವಾಗಿದ್ದನು. ಆದರೆ ಘಟನೆ ಬಳಿಕ ಬೇರೆಡೆಗೆ ಶಿಫ್ಟ್ ಆಗಿದ್ದನು. ಹೀಗಾಗಿ ಪೊಲೀಸರಿಗೆ ಈತನನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಆದರೆ ಶನಿವಾರದಂದು ಜಿಂಕ್ ಲೈನ್ ಬಡಾವಣೆಯಲ್ಲಿ ಆರೋಪಿ ಮಂಜುನಾಥ್ ಸ್ನೇಹಿತರೊಂದಿಗೆ ಇದ್ದಾನೆ ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಭದ್ರಾವತಿ ನ್ಯೂಟೌನ್ ಠಾಣೆಯ ಸಬ್ಇನ್ಸ್ಪೆಕ್ಟರ್, ಪೇದೆ ಅಶೋಕ್ ರವರು ಆರೋಪಿ ಮಂಜುನಾಥ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈತನ ಮೇಲೆ ನ್ಯಾಯಾಲಯ ದಸ್ತಗಿರಿ ವಾರೆಂಟ್ ಸಹ ಹೊರಡಿಸಿತ್ತು. ಕೊನೆಗೂ ಪೊಲೀಸರು ಆರೋಪಿ ಮಂಜುನಾಥ್ನನ್ನು ಪತ್ತೆ ಹಚ್ಚಿ ಭದ್ರಾವತಿ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.