ನವದೆಹಲಿ: ಕಡಿಮೆ ಅವಧಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಆರನೇ ವರ್ಷಾಚರಣೆಯಲ್ಲಿ ಮಾತನಾಡಿದ ಸಿಎಂ ಕೇಜ್ರಿವಾಲ್ ಅವರು, ಗುಜರಾತ್ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ 12 ವರ್ಷಗಳ ಕಾಲ ಆಡಳಿತ ಮಾಡಿದ್ದಾರೆ. ಆಗ ಅವರು ಮಾಡಿರುವ ಅಭಿವೃದ್ಧಿ ಕೆಲಸಕ್ಕಿಂತ ಹೆಚ್ಚು ಆಪ್ ಸರ್ಕಾರ ದೆಹಲಿಯಲ್ಲಿ ಮಾಡಿದೆ ಎಂದು ಅವರು, ಸರ್ಕಾರದ ಸಾಧನೆಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಅಭಿನಂದನೆ ಸಲ್ಲಿಸಿದರು.
ನಮ್ಮ ಆಡಳಿತಕ್ಕೆ ದೆಹಲಿಯ ಪ್ರಜೆಗಳು, ನಾವು ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಹೊಂದಿದ್ದೇವೆ ಅಂತ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಈಗ ಹೇಳಿ ನಿಮ್ಮ ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕರೇ ಎಂದು ಕೇಜ್ರಿವಾಲ್, ದೇಶದ ಜನತೆಯನ್ನು ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು, ರಫೇಲ್ ಹಗರಣ ಎದುರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಅವರ ಆಡಳಿತ ಅವಧಿಯಲ್ಲಿ ಉದ್ಯಮಿ ವಿಜಯ್ ಮಲ್ಯ ಹಾಗೂ ವಜ್ರ ವ್ಯಾಪಾರಿ ನೀರವ್ ಮೋದಿ ಬ್ಯಾಂಕ್ ಸಾಲ ಮರುಪಾವತಿಸದೆ ವಿದೇಶಕ್ಕೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಆಮ್ ಆದ್ಮಿ ಪಕ್ಷ ಆಡಳಿತಕ್ಕೆ ಬಂದು ಆರು ವರ್ಷ ಕಳೆದಿದೆ. ದೇಶದಲ್ಲಿ ರಾಜಕೀಯ ಭ್ರಷ್ಟಾಚಾರ ಹಾಗೂ ಕೋಮುವಾದದ ವಿರುದ್ಧ ಹೋರಾಟ ಮುಂದುವರಿಸಲಿದೆ ಎಂದು ಟ್ವೀಟ್ ಕೂಡ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv