ಬೆಂಗಳೂರು: ಕೆಪಿಸಿಸಿ ಕಚೇರಿ ಮುಂಭಾಗ ಪ್ರತಿಭಟಿಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುವ ವೇಳೆ ಮಾಜಿ ಡಿಸಿಎಂ ಅಶೋಕ್ ಅವರು ಗಾಯಗೊಂಡಿದ್ದಾರೆ.
ಬಿಜೆಪಿ ಕಚೇರಿ ಮುಂದೆ ಮಹದಾಯಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ಕಿಸಾನ್ ಮೋರ್ಚಾದ ಸದಸ್ಯರು ಕೆಪಿಸಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ಆಗಮಿಸಿದ್ದರು.
ಈ ವೇಳೆ ಅಲ್ಲಿ ನೆರೆದಿದ್ದ ಪೊಲೀಸರು ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಿಕೊಡಲಿಲ್ಲ. ಈ ಸಂದರ್ಭದಲ್ಲಿ ಬಿಜೆಪಿ ಕಚೇರಿ ಮುಂಭಾಗ ರೈತರಿಗೆ ಪ್ರತಿಭಟಿಸಲು ಅವಕಾಶ ನೀಡಿದ್ದೀರಿ. ನಾವು ಇಲ್ಲಿ ಬಂದು ಪ್ರತಿಭಟಿಸಲು ಅವಕಾಶ ನೀಡುವುದಿಲ್ಲ ಯಾಕೆ ಎಂದು ಪೊಲೀಸರನ್ನು ಪ್ರಶ್ನಿಸಿದ್ದಾರೆ.
ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದೇ ಇದ್ದಾಗ ಕಿಸನ್ ಮೋರ್ಚಾದ ಸದಸ್ಯರು ಬ್ಯಾರಿಕೇಡ್ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಪೊಲೀಸರು ತುಂಬಿದ್ದಾರೆ. ಬಸ್ ಗೆ ತಳ್ಳುವಾಗ ಅಶೋಕ್ ಅವರಿಗೆ ಗಾಯವಾಗಿದ್ದು ಅವರನ್ನು ಮಲ್ಯ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.