ಬೆಂಗಳೂರು: ಕೊರೊನಾ ತಡೆಗೆ ಮುಂಜಾಗ್ರತಾ ಕ್ರಮವಾಗಿ ಬೆಡ್, ಆಕ್ಸಿಜನ್ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಲು ಎಲ್ಲಾ ಡಿಸಿಗಳಿಗೂ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದೆ. ಓಮಿಕ್ರಾನ್ ಇಡೀ ದೇಶದಲ್ಲಿ ಜಾಸ್ತಿ ಆಗಿದೆ. ಕಳೆದ ಬಾರಿ ತೊಂದರೆ ಆದಂತೆ ಈ ಬಾರಿ ಆಗದಿರಲು ಎಚ್ಚರಿಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.
ಕೊರೊನಾ ತಡೆಗೆ ಎಲ್ಲೆಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಎರಡನೇ ಅಲೆಯ ಪಾಠ ನಮ್ಮ ಮುಂದೆ ಇದೆ. ಹೀಗಾಗಿ ಕೊರೊನಾ ತಡೆಗೆ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲು ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈವರೆಗೂ ಯಾವುದೇ ತೀರ್ಮಾನ ಆಗಿಲ್ಲ. ಸಿಎಂ ಜೊತೆ ಸಭೆ ನಂತರ ನಿರ್ಧಾರ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಟಫ್ ರೂಲ್ಸ್ ಜಾರಿಗೆ ಕಾಂಗ್ರೆಸ್ ವಿರೋಧಿಸಿರುವ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್ ಕೇಳಿ ಸರ್ಕಾರ ನಡೆಸಲು ಆಗುವುದಿಲ್ಲ. ನಾವು ಜನರ ಕಷ್ಟಕ್ಕೆ ಮಿಡಿಯಬೇಕಾಗಿದೆ. ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಆಗದಂತೆ ಕ್ರಮವಹಿಸಬೇಕು ಎಂದರು.
ಕೊರೊನಾ ಮೂರನೇ ಅಲೆ ಬಾರದಂತೆ ತಡೆಯುವುದು ನಮ್ಮ ಮೊದಲ ಆದ್ಯತೆ ಆಗಿದೆ. ತಜ್ಞರ ವರದಿ ಆಧರಿಸಿ ಸರ್ಕಾರ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ಪತನ – ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಯಾರು ಗೊತ್ತಾ?
ಬಿಪಿನ್ ರಾವತ್ ನಿಧನಕ್ಕೆ ಸಂತಾಪ: ಬಿಪಿನ್ ರಾವತ್ ಅವರು ಸೇನಾ ಕುಟುಂಬದಲ್ಲಿ ಜನಿಸಿದವರು. ಅವರು ದೇಶ ಸೇವೆಗೆ ತಮ್ಮ ಜೀವನ ಮುಡುಪಿಟ್ಟಿದ್ದರು. ಅನೇಕ ಯುದ್ಧದಲ್ಲಿ ಹೋರಾಟ ಮಾಡಿದ್ದ ಬಿಪಿನ್ ರಾವತ್, ಪಾಕಿಸ್ತಾನದ ವಿರುದ್ಧ ಹೋರಾಡಿದ್ದರು. ಅವರ ನಿಧನದಿಂದಾಗಿ ದೇಶ ವೀರಪುತ್ರರನ್ನ ಕಳೆದುಕೊಂಡಿದೆ. ಪಾಕಿಸ್ತಾನದ ಪತ್ರಿಕೆಗಳಲ್ಲಿ ಬಿಪಿನ್ ರಾವತ್ ಅವರ ನಿಧನದ ಸುದ್ದಿಯನ್ನು ಸಂಭ್ರಮಿಸಲಾಗಿದೆ. ಇದು ಅವರ ಹೀನ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪತನಗೊಂಡ ಹೆಲಿಕಾಪ್ಟರ್ನಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ- ಬಯಲಾಗುತ್ತಾ ದುರಂತದ ರಹಸ್ಯ?