ಗುವಹಾಟಿ: ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ (Kaziranga National Park) ಜೀಪ್ ಚಾಲನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಸದ್ಗುರು ಜಗ್ಗಿ ವಾಸುದೇವ್ ಮತ್ತು ಹಿಮಂತ ಬಿಸ್ವಾ ಶರ್ಮಾ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ವಾಹನ ಚಲಾಯಿಸಿದರು ಎಂಬ ಕಾರಣಕ್ಕೆ ಅವರಿಬ್ಬರ ವಿರುದ್ಧ ಉದ್ಯಾನವನದ ಹತ್ತಿರದ ಎರಡು ಗ್ರಾಮಗಳ ಇಬ್ಬರು ನಿವಾಸಿಗಳು ದೂರು ದಾಖಲಿಸಿದ್ದಾರೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನ್ನು ಪ್ರವಾಸಿಗರಿಗಾಗಿ ಶನಿವಾರ ತೆರೆಯಲಾಗಿತ್ತು. ಅಂದು ರಾತ್ರಿ ಸದ್ಗುರು ಜಗ್ಗಿ ವಾಸುದೇವ್ ಉದ್ಯಾನದ ಒಳಗೆ ಜೀಪ್ ಚಾಲನೆ ಮಾಡಿದ್ದಾರೆ. ಅವರ ಪಕ್ಕ ಸಿಎಂ ಹಿಮಂತ ಬಿಸ್ವಾ ಶರ್ಮಾ ಕುಳಿತಿದ್ದರು. ಅಸ್ಸಾಂ ಸಂಪುಟ ಸಚಿವ ಜಯಂತ ಮಲ್ಲ ಮತ್ತಿತರರು ಕೂಡಾ ಜೀಪ್ನಲ್ಲಿ ರಾತ್ರಿ ಉದ್ಯಾನದಲ್ಲಿ ಸಂಚರಿಸಿದ್ದರು. ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ನಷ್ಟ
ಇದೀಗ ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ (Wildlife Protection Act) ಸ್ಥಳೀಯರಾದ ಸೋನೇಶ್ವರ್ ನಾರಾ ಮತ್ತು ಪ್ರವೀಣ್ ಪೆಗು ಅಸ್ಸಾಂನ ಗೋಲಘಾಟ್ ಜಿಲ್ಲೆಯ ಬೊಕಾಕಾಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಫಾರಿ ವನ್ಯಜೀವಿ ಸಂರಕ್ಷಣೆ ಕಾಯ್ದೆ, 1972ರ ಉಲ್ಲಂಘನೆಯಾಗಿದೆ ಎಂದು ಎಫ್ಐಆರ್ನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಮಕ್ಕಳೊಂದಿಗೆ ಕೇರಳದ ಬೀದಿಗಳಲ್ಲಿ ಫುಟ್ಬಾಲ್ ಆಡಿದ ರಾಹುಲ್
ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಉದ್ಯಾನದೊಳಗೆ ಜೀಪ್ ಸಂಚಾರವನ್ನು ನಿಷೇಧಿಸಲಾಗಿದೆ. ಆದರೂ ಸದ್ಗುರು ಮತ್ತು ಹಿಮಂತ ಬಿಸ್ವಾ ಶರ್ಮಾ ಜೀಪ್ ಚಾಲನೆ ಮಾಡಿದ್ದಾರೆ. ಇಂತಹ ಘಟನೆಗಳಿಂದ ಕಾಜಿರಂಗ ಮತ್ತು ಅಲ್ಲಿಯ ಪ್ರಾಣಿಗಳ ಸಂರಕ್ಷಣೆಗೆ ಅಪಾಯ. ಕಾನೂನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಅವರಿಬ್ಬರನ್ನು ಬಂಧಿಸಿ ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಅವರಿಬ್ಬರೂ ಸಾರ್ವಜನಿಕರರೊಂದಿಗೆ ಕ್ಷಮೆ ಕೇಳಬೇಕು. ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಆರೋಪದ ಬೆನ್ನಲ್ಲೇ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ರಾತ್ರಿ ವೇಳೆ ಜೀಪ್ ಚಾಲನೆ ಮಾಡಿಲ್ಲ. ರಾತ್ರಿ ವೇಳೆ ಉದ್ಯಾನವನಕ್ಕೆ ಭೇಟಿ ಕೊಡಬಾರದೆಂದು ಕಾನೂನಿಲ್ಲ ಎಂದು ಹಿಮಂತ ಬಿಸ್ವಾ ಶರ್ಮಾ ಆರೋಪವನ್ನು ಅಲ್ಲಗಳೆದಿದ್ದಾರೆ.