ಹೈದರಾಬಾದ್: 2019ರ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದ ಸಿಕಂದರಬಾದ್ನಿಂದ ಸ್ಪರ್ಧಿಸಲು ಬಯಸುವುದಾಗಿ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ರವರು ಹೇಳಿದ್ದಾರೆ.
ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ಟಿಕೆಟ್ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಅಂತಿಮ ಎಂದರು.
ನಾನು ಈ ಕ್ಷೇತ್ರದಲ್ಲಿನ ಹಲವಾರು ಸ್ಥಳಗಳು ಮತ್ತು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ರೈತರು, ಜನರೊಂದಿಗೆ ಮಾತಾನಾಡಿದ್ದೇನೆ. ಭೇಟಿ ವೇಳೆ ಈ ಚುನಾವಣೆಯಲ್ಲಿ ಇಲ್ಲಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ. ಜನರಿಗಾಗಿ ಕೆಲಸ ಮಾಡಲು ಇಚ್ಛಿಸುತ್ತೇನೆ. ಆದರೆ ಪ್ರಚಾರವನ್ನು ನಾನು ಬಯಸುವುದಿಲ್ಲ. ನಾನು ನಿಲ್ಲಬೇಕೆಂದು ಜನ ಆಶಿಸುತ್ತಿದ್ದಾರೆ ಎಂದರು.
2009 ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಮೊರಾದಬಾದ್ನಲ್ಲಿ ಕಣಕ್ಕೆ ನಿಂತು ಜಯಗಳಿಸಿದ್ದ ಅಜರುದ್ದೀನ್, 2014 ರ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಸ್ಪರ್ಧಿಸಿ ಸೋತಿದ್ದರು.
ಕಳೆದ ವರ್ಷ ಜನವರಿಯಲ್ಲಿ ಅಜರುದ್ದೀನ್ ಅವರು ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್(ಎಚ್ಸಿಎ) ಅಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿದ್ದರು. ಆದರೆ ಮ್ಯಾಚ್ ಫಿಕ್ಸಿಂಗ್ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಅಜರ್ ಅರ್ಜಿ ತಿರಸ್ಕೃತಗೊಂಡಿತ್ತು.