ಚಿತ್ರದುರ್ಗ: ಲಿಂಗೈಕ್ಯರಾದ ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡದಿರುವುದು ಎಲ್ಲರಿಗಿಂತ ಹೆಚ್ಚಾಗಿ ನನಗೆ ನೋವು ತಂದಿದೆ. ಆದ್ರೆ ಏನ್ ಮಾಡೋದು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರಶ್ನಿಸಿ ಬೇಸರ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಹಿರಿಯೂರು, ಚಳ್ಳಕೆರೆ ತಾಲೂಕಿನ ವಿವಿಧೆಡೆ ಬರ ವೀಕ್ಷಣೆ ಮಾಡಿದ ಬಳಿಕ ಖಂಡೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡದಿರುವುದು ನೋವು ತಂದಿದೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನಕ್ಕಾಗಿ ಶಕ್ತಿಮೀರಿ ಪ್ರಯತ್ನಿಸಿದ್ದೇವೆ. ಈ ವಿಷಯದಲ್ಲಿ ಎಲ್ಲರಿಗಿಂತ ಹೆಚ್ಚು ನನಗೆ ನೋವಾಗಿದೆ, ಏನುಮಾಡುವುದು ಎಂದು ವಿಷಾದ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಾರತ ರತ್ನ – ಲತಾಗಿಲ್ಲದ ನಿಯಮಾವಳಿ ಸಿದ್ದಗಂಗಾ ಶ್ರೀಗಳಿಗೆ ಮಾತ್ರ ಯಾಕೆ?
ಚಿತ್ರದುರ್ಗ ಜಿಲ್ಲೆಯಲ್ಲಿ ನಾಲ್ಕು ವರ್ಷದಿಂದ ಬರ ತಾಂಡವವಾಡುತ್ತಿದೆ. ಬೆಳೆ ವಿಫಲವಾಗಿ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರ ವೀಕ್ಷಣೆ ವರದಿಯನ್ನು ಸರ್ಕಾರಕ್ಕೆ ನೀಡುತ್ತೇವೆ. ಅಧಿವೇಶನದಲ್ಲಿ ಬರ, ರೈತರ ಸ್ಥಿತಿಗತಿ ಬಗ್ಗೆ ಮಾತನಾಡುತ್ತೇವೆ. ಸಾಲ ಮನ್ನಾ ಮಾಡುತ್ತೇವೆ ಎಂದು ಸರ್ಕಾರ ಕಾಲಹರಣ ಮಾಡಿದೆ. ರಾಜ್ಯದಿಂದ ಕೊಟ್ಟಿರುವ ವರದಿಗೆ ಸ್ಪಂದಿಸಿ ಕೇಂದ್ರದಿಂದ ಪರಿಹಾರ ಕೊಡಿಸುತ್ತೇವೆ. ರಾಜ್ಯದ ಬಗ್ಗೆ ಮೋದಿ ಸರ್ಕಾರ ತಾರತಮ್ಯ ಮಾಡುವುದಿಲ್ಲ ಎಂದು ಅವರು ಭರವಸೆ ನೀಡಿದರು.
ಇದೇ ವೇಳೆ ಕಾಂಗ್ರೆಸ್ ಶಾಸಕ ಆನಂದಸಿಂಗ್ ಹಾಗೂ ಕಂಪ್ಲಿ ಶಾಸಕ ಗಣೇಶ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಸಮ್ಮಿಶ್ರ ಸರ್ಕಾರದ ಸಿಎಂ, ಮಂತ್ರಿಗಳು ಬರ ವೀಕ್ಷಿಸಿಲ್ಲ. ಬರ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲಿ ಕುಳಿತು ಪ್ರಧಾನಿ ಮೋದಿ ಕಡೆ ಬೆರಳು ತೋರುತ್ತಾರೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv