ಮೈಸೂರು: ನಂಜನಗೂಡಿನ ಆಯೋಜನೆಗೊಂಡಿದ್ದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದ ಮಧ್ಯದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದಾರೆ.
ಪಟ್ಟಣದ ವಿದ್ಯಾವರ್ಧಕ ಶಾಲಾ ಮೈದಾನದಲ್ಲಿ ಬಿಜೆಪಿ ವಿಜಯೋತ್ಸವ ಸಮಾರಂಭ ಆಯೋಜಿಸಲಾಗಿದ್ದು, ಇಂದು ಸಂಜೆಯವರೆಗೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಕಾರ್ಯಕರ್ತರ ಜೊತೆ ಸಭೆ ನಡೆಸಬೇಕಿತ್ತು.
ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಬಿಎಸ್ವೈ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ದೆಹಲಿ ಪ್ರಯಾಣವನ್ನು ಕೈಗೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿ ಶ್ರೀನಿವಾಸ ಪ್ರಸಾದ್, ಶಾಸಕರಾದ ಶ್ರೀರಾಮುಲು, ಎಸ್ ಎ ರಾಮದಾಸ್, ಎಲ್ ನಾಗೇಂದ್ರ, ನಿರಂಜನಕುಮಾರ್, ಹರ್ಷವರ್ಧನ್ ಭಾಗಿಯಾಗಿದ್ದರು.
ದೆಹಲಿ ಪ್ರಯಾಣ ಯಾಕೆ?
ಅಡಿಕೆ ಬೆಳೆಗಾರರ ಸಮಸ್ಯೆಯ ಪರಿಹಾರ ಸಂಬಂಧ ನಾಳೆ ಕೇಂದ್ರ ಸಚಿವರ ಭೇಟಿಗೆ ಸಮಯ ನಿಗದಿಯಾಗಿದ್ದು, ಬಿಎಸ್ ವೈ ನೇತೃತ್ವದ ನಿಯೋಗಕ್ಕೂ ಸಮಯ ನಿಗದಿಯಾಗಿದೆ. ಈ ಕಾರಣಕ್ಕೆ ಬಿಎಸ್ವೈ ತೆರಳಿದ್ದಾರೆ ಎನ್ನಲಾಗಿದೆ. ಇದರ ಜೊತೆಯಲ್ಲೇ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews