ಬಾಗಲಕೋಟೆ: ಕಳೆದ ಒಂದು ತಿಂಗಳಿನಿಂದ ಶಾಲೆಯಲ್ಲಿ ನಿಗೂಢವಾಗಿ ಬೀಳುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಶಾಲಾ ವಿದ್ಯಾರ್ಥಿನಿ ನಡೆಸುತ್ತಿದ್ದ ಕೃತ್ಯ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿದ ಎಸ್ಪಿ ಅವರು, ಇದು ಶಾಲಾ ಬಾಲಕಿ ನಡೆಸಿದ ಕೃತ್ಯವಾಗಿದ್ದು, ವಿದ್ಯಾರ್ಥಿನಿಯ ಶಾಲೆಯ ಬ್ಯಾಗ್ನಲ್ಲಿ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೇ ಆಕೆಯೇ ತಲೆ ಮೇಲೆ ಕಲ್ಲು ಬಿದ್ದಿದೆ ಎಂದು ಹೇಳುತ್ತಿದ್ದಳು. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಹೇಳಿದ್ದಾರೆ.
ಸದ್ಯ ವಿದ್ಯಾರ್ಥಿನಿಯ ಬ್ಯಾಗಿನಲ್ಲಿ ಕಲ್ಲು ಪತ್ತೆಯಾಗಿರುವುದರಿಂದ ಪೊಲೀಸರು ಬಾಲಕಿಯ ಹೇಳಿಕೆ ಪಡೆಯಲು ಮುಂದಾಗಿದ್ದಾರೆ. ಬಾಲಕಿಗೆ ಬೇರೆ ಯಾರೋ ಈ ರೀತಿ ಮಾಡುವಂತೆ ಹೇಳಿ ಕೃತ್ಯ ನಡೆಸಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್ಪಿ ತಿಳಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿನಿ ಚಿಕ್ಕವಳು ಆಗಿರುವುದರಿಂದ ಕೌನ್ಸಿಲಿಂಗ್ ಮೂಲಕ ಮಾಹಿತಿ ಪಡೆಯಲಾಗುತ್ತಿದೆ. ಏಕೆಂದರೆ ನೇರ ಪ್ರಶ್ನೆ ಮಾಡಿದರೆ ಇದು ಅಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದಿದ್ದಾರೆ.
ಜಿಲ್ಲೆಯ ಇಂಜಿನವಾರಿ ಗ್ರಾಮದಲ್ಲಿ ಕಳೆದ 1 ತಿಂಗಳಿನಿಂದ ಶಾಲೆಯ ಮೇಲೆ ಕಲ್ಲು ಎಸೆಯಲಾಗುತ್ತಿತ್ತು. ಪರಿಣಾಮ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯಪಡುವ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಿಂದ ಹಲವು ಮಕ್ಕಳ ತಲೆಗೆ ಗಾಯಗಳಾಗಿತ್ತು. ಇದರಿಂದ ಭಯಭೀತರಾಗಿ ಮಕ್ಕಳು ಶಾಲೆ ಬಿಟ್ಟ ಘಟನೆಗಳು ಇಡೀ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಭಾನಾಮತಿಯ ಕಾಟದಿಂದ ಕಲ್ಲು ಬೀಳುತ್ತಿವೆ ಎಂದು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದರು. ಆದರೆ ಇದನ್ನು ಅಲ್ಲಗೆಳೆದಿದ್ದ ಜಿಲ್ಲಾಧಿಕಾರಿಗಳು ಹಾಗೂ ಎಸ್ಪಿ ಅವರು ಪ್ರಕರಣವನ್ನು ಪತ್ತೆ ಮಾಡಲು ಶಾಲೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರು.
ಶಿಕ್ಷಣ ಇಲಾಖೆಯ ಸಿಬ್ಬಂದಿ ಶಾಲೆಯಲ್ಲಿ ಐದು ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಶಾಲೆಯ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಏರ್ಪಡಿಸಿದ್ದರು. ಆ ಬಳಿಕ ಕಲ್ಲು ಬೀಳುವುದು ನಿಂತಿತ್ತು. ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ವಿಜ್ಞಾನ ಪರಿವೀಕ್ಷಕರು, ಪವಾಡ ಬಯಲು ತಜ್ಞರು ಶಾಲೆಗೆ ಭೇಟಿ ನೀಡಿ ಪವಾಡ ಬಯಲು ಮಾಡುವ ಪ್ರಯತ್ನ ಮಾಡಿದರು. ಮಕ್ಕಳ ಮುಂದೆ ಕೆಲ ತಾಂತ್ರಿಕ ಪ್ರಯೋಗ ಮಾಡಿದ್ದರು. ಆದರೂ ಮಕ್ಕಳು ಮಾತ್ರ ಮಂತ್ರಿಸಿದಿ ನಿಂಬೆಹಣ್ಣು, ದೇವರ ಪ್ರಸಾದ ಹಿಡಿದುಕೊಂಡು ಶಾಲೆಗೆ ಆಗಮಿಸುತ್ತಿದ್ದರು.