ಹುಬ್ಬಳ್ಳಿ: ವಿಜಯಪುರ ದಲಿತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಕೊರೆಗಾಂವ್ ಗಲಭೆ ಹಾಗೂ ಕೇಂದ್ರ ಸಚಿವ ಅನಂತ್ಕುಮಾರ್ ಹೇಳಿಕೆ ಖಂಡಿಸಿ ಇಂದು ಹುಬ್ಬಳ್ಳಿ ಧಾರವಾಡದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ನಡೆಯುತ್ತಿದೆ.
ನಗರದಲ್ಲಿ ಪ್ರತಿಭಟನಾಕಾರರು ಕಲ್ಲು ತೂರುತ್ತಿದ್ದು, ಹಳೇ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿದ್ದ ಟಿಕೆಟ್ ಕೌಂಟರ್ ಧ್ವಂಸ ಮಾಡಿದ್ದಾರೆ. ಚೆನ್ನಮ್ಮ ವೃತ್ತದಲ್ಲಿ ಬೆಳ್ಳಂಬೆಳಗ್ಗೆ ಟೈರ್ ಗೆ ಬೆಂಕಿ ಹಚ್ಚಿ ಹೋರಾಟ ಮಾಡುತ್ತಿದ್ದಾರೆ.
ಮಹಾರಾಷ್ಟ್ರದ ಕೊರೆಗಾಂವ್ನಲ್ಲಿ ದಲಿತನ ಹತ್ಯೆ ಖಂಡಿಸಿ ಧಾರವಾಡದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ನಗರದ ಜುಬ್ಲಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿದ್ದಾರೆ. ಸಂವಿಧಾನ ಬದಲಾವಣೆ ಮಾಡುತ್ತೀನಿ ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆಯನ್ನು ದಲಿತ ಸಂಘಟನೆಗಳು ಖಂಡಿಸಿವೆ.
ಚಿಕ್ಕೋಡಿ, ಕಲಬುರಗಿ, ಆಳಂದದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಮುಂಜಾಗೃತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.