ಬೆಂಗಳೂರು: ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪರಾಜಿತ ಅಭ್ಯರ್ಥಿ ಮುನಿರಾಜು ತನ್ನನ್ನು ಶಾಸಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಚುನಾವಣಾ ಆಯೋಗವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ. ಹೀಗಾಗಿ ಚುನಾವಣೆ ನಡೆಸಲು ಆದೇಶಿಸಲು ಬರುವುದಿಲ್ಲ. ಆದರೆ ಆರ್.ಆರ್. ಕ್ಷೇತ್ರದ ಜನಪ್ರತಿನಿಧಿ ಇಲ್ಲದೆ ಇರುವುದು ಸೂಕ್ತವಲ್ಲ ಎಂದು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅಭಿಪ್ರಾಯಪಟ್ಟಿದ್ದಾರೆ.
ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ, ಕಲಬುರಗಿ ಪೀಠದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತೀರ್ಪು ಪ್ರಕಟಿಸಿದೆ.
2018ರ ವಿಧಾನಸಭೆ ಚನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಮುನಿರತ್ನ ಅವರು ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಪಿ.ಎಂ.ಮುನಿರಾಜುಗೌಡ ತಕಾರರು ಅರ್ಜಿಯನ್ನು ಸಲ್ಲಿಸಿದ್ದರು. ಈ ಮುಖ್ಯ ಅರ್ಜಿಯ ವಿಚಾರಣೆ ಬಾಕಿಯಿದ್ದು, ಹೈಕೋರ್ಟ್ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ.
ಏನಿದು ಕೇಸ್?
ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮುನಿರತ್ನ ಗೆಲುವು ಕಂಡಿದ್ದರು. ಈ ಚುನಾವಣೆಗೂ ಮುನ್ನ 2018ರ ಮೇ 9 ರಂದು ಜಾಲಹಳ್ಳಿಯ ಫ್ಲಾಟ್ ನಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿ ಅಕ್ರಮವಾಗಿ ಸಂಗ್ರಹಿಸಲಾಗಿತ್ತು.
ಮುನಿರತ್ನ ಅವರು ಚುನಾವಣಾ ಪ್ರಚಾರಕ್ಕೆ ನಿಗದಿಪಡಿಸಿದ್ದ 25 ಲಕ್ಷ ರೂ.ಗಳಿಗಿಂತ ಹೆಚ್ಚುವರಿ 3.38 ಲಕ್ಷ ಹಣ ವೆಚ್ಚ ಮಾಡಿದ್ದಾರೆ. ಸೀರೆ, ಕುಕ್ಕರ್ ಗಳನ್ನು ಹಂಚಿ ಚುನಾವಣಾ ನೀತಿ ಸಂಹಿತಿಯನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಮುನಿರತ್ನ ಆಯ್ಕೆಯನ್ನು ಅಸಿಂಧುಗೊಳಿಸಿ ಎರಡನೇ ಸ್ಥಾನ ಪಡೆದ ನನ್ನನ್ನು ವಿಜೇತರನ್ನಾಗಿ ಪ್ರಕಟಿಸಬೇಕೆಂದು ಅರ್ಜಿಯಲ್ಲಿ ಕೇಳಿಕೊಂಡಿದ್ದರು.
ಮುನಿರತ್ನ ಅವರು ಈಗ ಬಿಜೆಪಿಗೆ ಸೇರ್ಪಡೆಗೊಂಡಿದ್ದು ಈ ಪ್ರಕರಣ ನ್ಯಾಯಾಲಯದಲ್ಲಿ ಇದ್ದ ಕಾರಣ ಚುನಾವಣಾ ಆಯೋಗ ರಾಜರಾಜೇಶ್ವರಿನಗರದ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಿರಲಿಲ್ಲ.