ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ಷೇತ್ರ ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಸರಿಹೋಗಲಿಲ್ಲ ಎಂದು ಮೈತ್ರಿ ಅಭ್ಯರ್ಥಿಯಾಗಿದ್ದ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣಾ ಫಲಿತಾಂಶ ಕುರಿತು ಪರಾಮರ್ಶೆ ಮಾಡುತ್ತೇವೆ. ಚುನಾವಣೆಯಲ್ಲಿ ನಾಯಕರು ಹೊಂದಾಣಿಕೆ ಮಾಡಿಕೊಂಡರೆ ಸರಿಹೋಗುವುದಿಲ್ಲ ತಳಮಟ್ಟದಲ್ಲೂ ಹೊಂದಾಣಿಕೆ ಆಗುವುದು ಮುಖ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎರಡೂ ಪಕ್ಷಗಳ ನಾಯಕರು ಹೊಂದಾಣಿಕೆಯನ್ನು ಜವಾಬ್ದಾರಿಯಿಂದ ನಿರ್ವಹಿಸಲಿಲ್ಲ. ಸೂಕ್ತ ಹೊಂದಾಣಿಕೆ ಇದ್ದಿದ್ದರೆ ಈ ರೀತಿಯ ಫಲಿತಾಂಶ ಬರುತ್ತಿರಲಿಲ್ಲ. ಸಮನ್ವಯತೆಯ ಕೊರತೆಯೇ ಈ ಫಲಿತಾಂಶಕ್ಕೆ ಮೂಲ ಕಾರಣ. ಸರ್ಕಾರದ ಮಟ್ಟದಲ್ಲಿ ಹೊಂದಾಣಿಕೆ ಆಗಿತ್ತು ಆದರೆ ತಳಮಟ್ಟದಲ್ಲಿ ಹೊಂದಾಣಿಕೆ ಆಗಬೇಕು. ಈ ಕೆಲಸ ಮೊದಲು ಆಗಬೇಕು ಎಂದು ಹೇಳಿದರು.
ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಮೊಯ್ಲಿ ಅವರು, ಯಡಿಯೂರಪ್ಪ ಅವರ ಅಸ್ತಿತ್ವ ಆಪರೇಷನ್ ಕಮಲದಿಂದಲೇ ಇರೋದು. ಅದಕ್ಕಾಗಿ ಯಡಿಯೂರಪ್ಪ ಯಾವಾಗಲೂ ಆಪರೇಷನ್ ಕಮಲ ಎನ್ನುತ್ತಿರುತ್ತಾರೆ ಎಂದು ಆರೋಪ ಮಾಡಿದರು. ರಾಷ್ಟ್ರ ಮತ್ತು ರಾಜ್ಯದ ದೃಷ್ಟಿಯಿಂದ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿರಬೇಕು. ಸರ್ಕಾದದಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಂಡು ಸರ್ಕಾರ ಮುನ್ನಡೆಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.