ಯಾದಗಿರಿ: ಯಾದಗಿರಿ, ರಾಯಚೂರ ಜಿಲ್ಲೆಗಳ ಜೀವನಾಡಿ ಬಸವಸಾಗರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು ರೈತರು ಸಂತೋಷಗೊಂಡಿದ್ದಾರೆ.
ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದ ಒಟ್ಟು 33.33 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದ್ದು, ಇದೀಗ ಜಲಾಶಯದಲ್ಲಿ 33 ಟಿಎಂಸಿ ನೀರು ಈಗ ಸಂಗ್ರಹವಾಗಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜಲಾಶಯ ತುಂಬಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ಕರ್ನಾಟಕದ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಿಡಲಾಗುತ್ತಿದೆ. ಇದರಿಂದ ಆಲಮಟ್ಟಿ, ಬಸವಸಾಗರ ಜಲಾಶಯಗಳು ಭರ್ತಿಯಾಗಿವೆ.
ಆಲಮಟ್ಟಿ ಜಲಾಶಯಕ್ಕೆ ಭರ್ತಿಯಾಗಿದ್ದು ಅಲ್ಲಿಂದ ನೀರು ಬಿಟ್ಟ ಹಿನ್ನೆಲೆಯಲ್ಲಿ ಈಗ ಬಸವಸಾಗರ ಜಲಾಶಯ ಭರ್ತಿಯಾಗಿದೆ. ಈಗ 20 ಸಾವಿರ ಕ್ಯೂಸೆಕ್ ನೀರು ಒಳಹರಿವು ಇದ್ದು, ಕೃಷ್ಣಾನದಿಗೆ 6 ಸಾವಿರ ಕ್ಯೂಸೆಕ್ ಹಾಗೂ ಕೃಷ್ಣಾ ಎಡ ಮತ್ತು ಬಲದಂಡೆ ಕಾಲುವೆಗಳಿಗೆ 10 ಸಾವಿರ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.
ಉತ್ತರ ಕರ್ನಾಟಕದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳದೇ ಇದ್ದರೂ ಜಲಾಶಯ ಭರ್ತಿಯಾಗಿದ್ದು, ಮುಂಬರುವ ದಿನಗಳಲ್ಲಿ ಎದರಿಸಬಹುದಾದ ನೀರಿನ ಸಮಸ್ಯೆಗೆ ಮುಕ್ತಿ ಸಿಕ್ಕಿದ್ದಕ್ಕೆ ರೈತರಲ್ಲಿ ಸಂತಸ ಮೂಡಿಸಿದೆ. ನೀರು ಹೊರ ಬಿಡುತ್ತಿರುವುದರಿಂದ ಯಾವುದೇ ಕಾರಣಕ್ಕೂ ಜನತೆ ನದಿ ತೀರಕ್ಕೆ ತೆರಳದಂತೆ ಜಲಾಶಯದ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕ್ಯೂಸೆಕ್ ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು cubic foot per second ಹೃಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.
ಇದನ್ನೂ ಓದಿ: ಆಲಮಟ್ಟಿ ಡ್ಯಾಂ ಭರ್ತಿ: ರೈತರ ಮೊಗದಲ್ಲಿ ಸಂತಸ