ಹುಬ್ಬಳ್ಳಿ: ದೆಹಲಿಯಿಂದ ಕರೆ ಬರುವ ನಿರೀಕ್ಷೆಯಿದೆ. ಕರೆ ಬಂದಾಗ ಡೆಲ್ಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸುತ್ತೆನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆ ನೀಡಲು ತೆರಳುತ್ತಿದ್ದೇನೆ. ಬಜೆಟ್ನಲ್ಲಿ ಘೋಷಣೆಯಾದ ಎಲ್ಲಾ ಯೋಜನೆಗಳ ಅನುಷ್ಠಾನಕ್ಕೆ ವಿಶೇಷ ಸಮಿತಿ ರಚನೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ. ನವೆಂಬರ್ನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಬಂಡವಾಳ ಹೂಡಿಕೆದಾರರು ಸಮಾವೇಶ ನಡೆಯುತ್ತಿದೆ. ಅದರ ಸಿದ್ಧತೆ ಭರದಿ ನಡೆದಿದೆ. ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ನಂಬರ್ ಒನ್ ಆಗಿದೆ. ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವೇ ನಂಬರ್ ಒನ್ ಆಗಿದ್ದೇವೆ. ಏಪ್ರಿಲ್ ಒಂದಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿಲಿದ್ದಾರೆ. ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ. ಪ್ರಧಾನಮಂತ್ರಿಗಳ ರಾಜ್ಯಕ್ಕೆ ಭೇಟಿ ನೀಡುವುದು ಅಧಿಕೃತ ಗೊಳ್ಳಬೇಕಿದೆ ಎಂದು ಹೇಳಿದ್ದಾರೆ.