ಬೆಂಗಳೂರು: ಹುಬ್ಬಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ಆ. 15ರ ಒಳಗೆ ಶಂಕು ಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಜೆಟ್ ಘೋಷಣೆಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇಂದು ಗೃಹ ಕಚೇರಿ ಕೃಷ್ಣದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಗೆ 250 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಕಟ್ಟಡ ಶಂಕು ಸ್ಥಾಪನೆಗೆ ಆ. 15ರ ಒಳಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಾಕೀತು ಮಾಡಿದರು.
ಇದಲ್ಲದೆ ಕರ್ನಾಟಕದಲ್ಲಿ ಪಿಜಿ ಕೇಂದ್ರವನ್ನು ಸ್ಥಾಪಿಸಲು ಎಲ್ಲಾ ಸೌಕರ್ಯಗಳಿವೆ. ಇದನ್ನು ಪ್ರಾರಂಭಿಸಲು ಅಗತ್ಯವಿರುವ ಅನುಮೋದನೆಯನ್ನು ರಾಷ್ಟ್ರೀಯ ವೈದ್ಯಕೀಯ ಮಂಡಳಿಯಿಂದ ಪಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಅಗತ್ಯವಿರುವ ಪಿಜಿ ಸ್ಥಾನಗಳ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದರು. ಇದನ್ನೂ ಓದಿ: ‘ಆರ್ಎಸ್ಎಸ್’ ದೇಶದ ಶ್ರೀಮಂತ ಎನ್ಜಿಓ, ಅದಕ್ಕೆ ಹಣ ಎಲ್ಲಿಂದ ಬರುತ್ತೆ?: ಬಿ.ಕೆ ಹರಿಪ್ರಸಾದ್
ರಾಮನಗರ ಜಿಲ್ಲೆಯ ಅರ್ಚಕರಹಳ್ಳಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಿ, ಜೂನ್ ಅಂತ್ಯದೊಳಗೆ ಕಾಲೇಜು ನಿರ್ಮಾಣ ಕಾರ್ಯ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಉಕ್ರೇನ್ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್- ಡಾಕ್ಟರ್ ಆಗುವ ಕನಸಿಗೆ ನೀರೆರದ ಸಿದ್ದಗಂಗಾ
ನಿಮ್ಹಾನ್ಸ್ ಮೂಲಕ ಅಂಗಾಂಗ ದಾನ ಪ್ರಕ್ರಿಯೆಯನ್ನು ಈ ವರ್ಷವೇ ಪ್ರಾರಂಭಿಸಬೇಕು. ಚಿತ್ರದುರ್ಗದಲ್ಲಿ ನೂತನ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕೈಗೊಳ್ಳಲಾಗಿರುವ ಪ್ರಕ್ರಿಯೆಗಳಿಗೆ ವೇಗ ನೀಡಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.