ಮೈಸೂರು: ನಾನು ನಾಳೆ ಸಚಿವನಾಗುವುದಿಲ್ಲ. ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಸಚಿವ ಸ್ಥಾನ ಹಂಚಿಕೆ ಮಾಡಲಾಗಿರುವ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲ ಎಂದು ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಿಂದ ಜಯಗಳಿಸಿರುವ 37 ಜನ ಶಾಸಕರು ಸಚಿವ ಸ್ಥಾನ ಬೇಕೆಂದು ಪಟ್ಟು ಹಿಡಿದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುವವರಿಗೆ ಹಾಗೂ ಹೊಸಬರಿಗೆ ಅವಕಾಶ ನೀಡಲೆಂದು ನಾನೇ ಸುಮ್ಮನಿರುವೆ ಎಂದು ತಿಳಿಸಿದರು.
ಇದು ನನ್ನ ತ್ಯಾಗವಲ್ಲ, ಸರ್ಕಾರ ಸುಸೂತ್ರವಾಗಿ ನಡೆಯಲು ಅವಕಾಶ ಮಾಡಿಕೊಡುತ್ತಿರುವ ಪ್ರಕ್ರಿಯೆ ಅಷ್ಟೇ. ಹಿರಿಯರಾದ ಎಚ್.ವಿಶ್ವನಾಥ್ ಅವರಿಗೆ ಸಂಪುಟದಲ್ಲಿ ಅವಕಾಶವಿಲ್ಲ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಆದರೆ ನನ್ನ ಹೆಸರು ಪಟ್ಟಿಯಲ್ಲಿ ಇಲ್ಲ ಎಂಬುದು ಗೊತ್ತಾಗಿದೆ. ಸಚಿವ ಸ್ಥಾನ ನೀಡುವಂತೆ ನಾನು ಯಾವತ್ತೂ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿಕೊಂಡಿಲ್ಲ. ಅಲ್ಲದೇ ಅವರು ಕೂಡಾ ಈ ವಿಚಾರವಾಗಿ ನನ್ನ ಜೊತೆ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.