ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಾರದೆಂದು ಆಗ್ರಹಿಸಿ ಏಪ್ರಿಲ್ 12 ಗುರುವಾರ ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ನಗರದ ಹೊರವಲಯದ ಅತ್ತಿಬೆಲೆ ಗಡಿಯಲ್ಲಿ ವಾಟಾಳ್ ನಾಗರಾಜ್ ಹಾಗೂ ಮಂಜುನಾಥ್ ದೇವಾ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ನಿರ್ವಹಣಾ ಮಂಡಳಿಗೆ ಒತ್ತಾಯಿಸುತ್ತಿರುವ ತಮಿಳುನಾಡು ವಿರುದ್ಧ ಪ್ರತಿಭಟನೆ ನಡೆಸಿದ್ರು.
ಈ ವೇಳೆ ಮಾತನಾಡಿದ ವಾಟಾಳ್, ತಮಿಳುನಾಡು ಒತ್ತಡದ ನಾಟಕ ಆಡ್ತಿದೆ. ನಿರ್ವಹಣಾ ಮಂಡಳಿ ರಚಿಸಿದರೆ ಕನ್ನಡಿಗರ ತೀವ್ರ ಪ್ರತಿಭಟನೆ ಎದುರಿಸಬೇಕಾಗುತ್ತೆ ಅಂತ ಪ್ರಧಾನಿ ಮೋದಿಗೆ ವಾಟಾಳ್ ಎಚ್ಚರಿಕೆ ನೀಡಿ, ತಮಿಳುನಾಡಿನ ಒತ್ತಾಯಕ್ಕೆ ಮಣಿಯದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ರು.
ಇನ್ಮುಂದೆ ಕರ್ನಾಟಕದಲ್ಲಿ ರಜನಿಕಾಂತ್ ಹಾಗೂ ಕಮಲಹಾಸನ್ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ಯಾಕಂದ್ರೆ ಈ ಇಬ್ಬರು ನಟರೂ ಕಾವೇರಿ ನಿರ್ವಹಣಾ ಮಂಡಳಿ ಪರವಾಗಿ ನಿಂತಿದ್ದಾರೆ. ಹೀಗಾಗಿ ಅವರ ಚಿತ್ರಗಳು ಕರ್ನಾಟಕ ಪ್ರವೇಶ ಮಾಡಲು ಅವಕಾಶ ಕೊಡುವುದಿಲ್ಲ ಅಂತ ಹೇಳಿದ್ರು.
ಪ್ರತಿಭಟನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾ ರಾ ಗೋವಿಂದ್, ಮಂಜುನಾಥ ದೇವಾ ಹಾಗೂ ಇತರೆ ಕನ್ನಡಪರ ಸಂಘಟನೆಗಳ ನಾಯಕರುಗಳ ಸಾಥ್ ನೀಡಿದರು. ಇನ್ನು ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ಸೇರಿದಂತೆ 20ಕ್ಕೂ ಹೆಚ್ಚು ಕನ್ನಡಪರ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.