ಬೆಂಗಳೂರು: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಚಲುವರಾಯಸ್ವಾ ಮಂಗಳವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.
ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿ.ಮೀ ಮಳೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 108 ಮಿ.ಮೀ ಮಳೆಯಾಗಿದ್ದು, ಯಾವುದೇ ಕೊರತೆ ಆಗಿಲ್ಲ. 2022-23 ನೇ ಸಾಲಿನ 3ನೇ ಮುಂಗಡ ಅಂದಾಜಿನಂತೆ 139.28 ಲಕ್ಷ ಟನ್ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ. 2023 ರ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ಪೂರ್ವ ಮುಂಗಾರು ಬೆಳೆಗಳ 2.95 ಲಕ್ಷ ಹೆಕ್ಟೇರ್ ಗುರಿಯಿದ್ದು, ಇದುವರೆಗೆ 2.48 ಲಕ್ಷ ಹೆಕ್ಟೇರ್ (84%) ಪ್ರದೇಶದಲ್ಲಿ ಕೈಗೊಳ್ಳಲಾಗಿದೆ. 5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆಯಿದ್ದು, 7.85 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯವಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
2023-24 ಸಾಲಿನ ಮುಂಗಾರು ಹಂಗಾಮಿಗೆ 25.47 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ. 7.30 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದೆ. ಪ್ರಸ್ತುತ ಖಾಸಗಿ ಹಾಗೂ ಸಹಕಾರ ಸಂಘಗಳಲ್ಲಿ 13.90 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. 1.68 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಕಾಪು ದಾಸ್ತಾನು (Buffer Stock) ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಲಭ್ಯವಿದ್ದು, ಪ್ರಸ್ತುತ ರಸಗೊಬ್ಬರದ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.
ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರಿಗೆ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗಬಾರದು. ಪರೀಕ್ಷೆ ಮಾಡಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಕೆ ಮಾಡಬೇಕು. ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪೂರೈಸಬೇಕು. ಮುಂಗಾರಿನಲ್ಲಿ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಅವರು ಸೂಚನೆ ನೀಡಿದರು.
ಇದರ ಜೊತೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒಗಳು ಹಾಜರಿರಬೇಕು. ಮಣ್ಣಿನ ಪರೀಕ್ಷೆಯ (Soil Test) ರಿಪೋರ್ಟ್ಗಳನ್ನು ಸೂಕ್ತ ಸಮಯದಲ್ಲಿ ನೀಡಬೇಕು. ಬೆಳೆ ವಿಮೆ ನೀಡುವಲ್ಲಿ ರೈತರಿಗೆ ಸಮಸ್ಯೆ ಆಗಬಾರದು. ಜಿಲ್ಲಾ ಮಟ್ಟದಲ್ಲಿ ಯಾವುದೇ ಸಮಸ್ಯೆಯಾದರೂ ಜಂಟಿ ನಿರ್ದೇಶಕರೇ ನೇರ ಹೊಣೆ ಆಗ್ತೀರಾ ಎಂದು ಸಚಿವರು ಎಚ್ಚರಿಕೆ ನೀಡಿದರು.
ನೆಟೆ ರೋಗ – ಶೀಘ್ರ ಪರಿಹಾರ ಬಿಡುಗಡೆ:
2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 1,98,488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14,495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20,401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10,259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿದೆ. ಇದರಿಂದ ನಷ್ಟವಾದ ರೈತರಿಗೆ ಪ್ರತಿ ಹೆಕ್ಟೇರ್ 10,000 ರೂ. ಪರಿಹಾರದಂತೆ ಗರಿಷ್ಠ 2 ಹೆಕ್ಟೇರ್ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಶೀಘ್ರದಲ್ಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅಶ್ವಥ್ ನಾರಾಯಣ್ಗೆ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್
ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ:
ಕೃಷಿ ಇಲಾಖೆಯಲ್ಲಿ 58% ರಷ್ಟು ಹುದ್ದೆಗಳು ಖಾಲಿಯಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ರೈತರಿಗೆ ತಲುಪಿಸಲು ವಿಳಂಬ ಆಗಲಿದೆ. ಆ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಅವಶ್ಯವಿದೆ. ಹಾಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕೃಷಿ ಇಲಾಖೆಗೆ ಒಟ್ಟು 8,982 ಹುದ್ದೆಗಳು ಮಂಜೂರಾಗಿದ್ದು, ಆ ಪೈಕಿ 3,787 ಹುದ್ದೆಗಳು ಭರ್ತಿಯಾಗಿವೆ. 5,195 ಹುದ್ದೆಗಳು ಖಾಲಿ ಇರುತ್ತವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 10 ಕೆಜಿ ಉಚಿತ ಅಕ್ಕಿ – ಸರ್ಕಾರದ ಲೆಕ್ಕಾಚಾರ ಏನು?