ಕಾರವಾರ: ಬೇಲೆಕೇರಿ ಬಂದರಿನಿಂದ (Belekeri Iron Ore Case) ಅಕ್ರಮವಾಗಿ ಕಬ್ಬಿಣದ ಅದಿರು ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ (Satish Sail) ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಶಾಸಕರಿಗೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನು ಅವಧಿಯನ್ನು ನ್ಯಾಯಾಲಯವು ನವೆಂಬರ್ 20ರ ವರೆಗೆ ವಿಸ್ತರಿಸಿ ಆದೇಶ ನೀಡಿದೆ.
ನ್ಯಾಯಮೂರ್ತಿಗಳು ಈ ಕುರಿತು ಆದೇಶ ಹೊರಡಿಸಿದ್ದು, ಶಾಸಕರ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಲು ಅರ್ಹ ವೈದ್ಯರ ಹೆಸರನ್ನು ಸೂಚಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನಿರ್ದೇಶನ ನೀಡಿದ್ದಾರೆ. ಶಾಸಕ ಸತೀಶ್ ಸೈಲ್ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ; 1.68 ಕೋಟಿ, 6 ಕೆಜಿ ಚಿನ್ನದ ಬಿಸ್ಕೆಟ್ ವಶಕ್ಕೆ
ವಿಶೇಷ ನ್ಯಾಯಾಲಯವು ಇತ್ತೀಚೆಗೆ, ಸತೀಶ್ ಸೈಲ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಸೂಚಿಸಲಾದ ವೈದ್ಯಕೀಯ ಚಿಕಿತ್ಸೆಗೆ ಬದ್ಧರಾಗಿಲ್ಲ ಎಂಬ ಕಾರಣ ನೀಡಿ ಅವರ ವೈದ್ಯಕೀಯ ಜಾಮೀನನ್ನು ರದ್ದುಗೊಳಿಸಿ, ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
ವಿಶೇಷ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಸೈಲ್ ಅವರು ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಮಧ್ಯಂತರ ಜಾಮೀನು ಮುಂದುವರೆಸಿತ್ತು. ಇದೀಗ ಮತ್ತೆ ಒಂದು ವಾರಗಳ ಕಾಲ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ. ಇದನ್ನೂ ಓದಿ: ಬೇಲೆಕೇರಿ ಅದಿರು ನಾಪತ್ತೆ ಕೇಸ್ – 6 ಪ್ರಕರಣಗಳಲ್ಲೂ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು


