ಬೆಂಗಳೂರು: ನಮ್ಮ ನಾಯಕರಿಗೆ ಸಚಿವ ಸ್ಥಾನ ಕೊಡಿ ಎಂದು ಶಾಸಕ ಬಾಬುರಾವ್ ಚಿಂಚನಸೂರ್ ಬೆಂಬಲಿಗರು ಸಿಎಂ ಯಡಿಯೂರಪ್ಪನವರ ಕಾಲಿಗೆ ಬಿದ್ದಿದ್ದಾರೆ.
ನಮ್ಮ ನಾಯಕರು ಲೋಕಸಭಾ ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಲಿಸೋಕೆ ಕೂಡ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗಾಗಲೇ ಅವರಿಗೆ ನೀವು ಕೂಡ ಮಂತ್ರಿ ಸ್ಥಾನದ ಭರವಸೆ ಕೊಟ್ಟಿದ್ದೀರಿ. ಹಾಗಾಗಿ ನಮ್ಮ ನಾಯಕನಿಗೆ ಸಚಿವ ಸ್ಥಾನ ಕೊಡಿ ಎಂದು ಸಿಎಂ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ.
ಈ ವೇಳೆ ಮಾತನಾಡಿದ ಯಡಿಯೂರಪ್ಪನವರು, ನಿಮ್ಮ ಅಭಿಪ್ರಾಯ ಸೇರಿದಂತೆ ಚಿಂಚನಸೂರ್ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರ ಗಮನಕ್ಕೆ ತರುತ್ತೇನೆ. ನನಗೆ ಚಿಂಚನಸೂರ್ ಮೇಲೆ ಅಪಾರ ಗೌರವ ಇದೆ. ನೀವೇನು ನನಗೆ ಬಂದು ಮಂತ್ರಿ ಮಾಡಿ ಎಂದು ಕೇಳೋ ಅಗತ್ಯ ಇಲ್ಲ. ನಿಮ್ಮ ಭಾವನೆಗಳನ್ನು ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸುತ್ತೇನೆ. ಅವರಿಗೆ ಮಂತ್ರಿ ಸ್ಥಾನ ಕೊಡಿಸೋ ಬಗ್ಗೆ ನಾನು ಏನು ಪ್ರಯತ್ನ ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಬೆಂಬಲಿಗರಿಗೆ ಭರವಸೆ ನೀಡಿದ್ದಾರೆ.