ಬೆಂಗಳೂರು: ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಗರಂ ಆಗಿದ್ದಾರೆ.
ಇಂದು ಬೆಂಗಳೂರಿನ ಬಿಜೆಪಿ ಸಭೆಯಲ್ಲಿ ನಡೆದ ಈ ಸಭೆಯಲ್ಲಿ ನಿಗಮ ಮಂಡಳಿಗಳ ನೇಮಕ ಮಾಡುವಾಗ ಪಕ್ಷದ ಗಮನಕ್ಕೆ ತನ್ನಿ ಎಂದು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿಎಸ್ವೈ ಗೆ ಸೂಚಿಸಿದ್ದಾರೆ. ಇದಕ್ಕೆ ಯಡಿಯೂರಪ್ಪ ಕೆಂಡಾಮಂಡಲವಾಗಿದ್ದಾರೆ ಎನ್ನಲಾಗಿದೆ.
ಎಲ್ಲವನ್ನೂ ಪಕ್ಷದ ಗಮನಕ್ಕೆ ತಂದು ನೇಮಕ ಮಾಡಲು ಆಗಲ್ಲ. ಸಚಿವ ಸ್ಥಾನ ವಂಚಿತ ಶಾಸಕರು, ಅಸಮಾಧಾನಿತರು ಬಹಳ ಜನ ಇದ್ದಾರೆ. ಅವರನ್ನು ನಿಗಮ ಮಂಡಳಿಗಳ ನೇಮಕಕ್ಕೆ ಪರಿಗಣಿಸಬೇಕಾಗುತ್ತೆ ಎಂದ ಬಿಎಸ್ವೈ, ಇದೇ ವೇಳೆ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡುವಾಗ ನಮ್ಮ ಗಮನಕ್ಕೆ ತನ್ನಿ ಎಂದು ನಳೀನ್ ಕುಮಾರ್ ಕಟೀಲ್ ಅವರಿಗೆ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ
ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ನೇಮಕ ಮಾಡಿದ್ದಕ್ಕೆ ಗರಂ ಆದ ಬಿಎಸ್ ಯಡಿಯೂರಪ್ಪ, ಯಾರ ಗಮನಕ್ಕೂ ಬಾರದೇ ಹೇಗೆ ಪ್ರಧಾನ ಕಾರ್ಯದರ್ಶಿ ಮಾಡಿದ್ದು, ಇನ್ನು ಮುಂದೆ ಪದಾಧಿಕಾರಿಗಳ ನೇಮಕ ಮಾಡುವಾಗ ನಮ್ಮ ಗಮನಕ್ಕೆ ತನ್ನಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.