ಬೆಂಗಳೂರು: ಸಚಿವ ಸಂಪುಟದಲ್ಲಿ ನಗರಾಭಿವೃದ್ಧಿ ಖಾತೆ ಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ಕೆ.ಆರ್ ಪುರಂ ಶಾಸಕ ಬೈರತಿ ಬಸವರಾಜ್ ತಿಳಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸಚಿವ ಸಂಪುಟದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಸಿಕ್ಕ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನನಗೆ ನಗರಾಭಿವೃದ್ಧಿ ಖಾತೆ ಬೇಕೆಂದು ಮನವಿ ಮಾಡಿದ್ದೇನೆ ಎಂದು ಬೈರತಿ ಬಸವರಾಜು ಹೇಳಿದ್ದಾರೆ.
ಕೆ.ಆರ್ ಪುರಂನ ತಮ್ಮ ನಿವಾಸದ ಬಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಅವರು, ಸಚಿವ ಸ್ಥಾನ, ಖಾತೆ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರವಾಗಿದ್ದು, ಅವರ ಬಳಿ ನಗರಾಭಿವೃದ್ಧಿ ಖಾತೆ ಕೇಳಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ನನಗೆ ನಗರಗಳ ಅಭಿವೃದ್ಧಿ ಮಾಡಬೇಕೆಂಬ ಆಸಕ್ತಿ ಇದೆ. ಹಾಗಾಗಿ ನಗರಾಭಿವೃದ್ಧಿ ಖಾತೆಗೆ ಮನವಿ ಮಾಡಿದ್ದೇನೆ. ಜೊತೆಗೆ ನನಗೆ ಯಾವ ಖಾತೆಯನ್ನು ನೀಡಿದರು ಸಹ ನಿಭಾಯಿಸಲು ಸಿದ್ಧನಿದ್ದೇನೆ ಎಂದರು.