ಬೆಂಗಳೂರು: ರೈತರ ಸಾಲಮನ್ನಾ ಕುರಿತಂತೆ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಾಳೆ ಯಾವುದೇ ಬಂದ್ ಗೆ ಅವಕಾಶವಿಲ್ಲ. ಒಂದು ವೇಳೆ ಬಂದ್ ಗೆ ಮುಂದಾದರೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಅಂತ ಬಂದ್ ಮಾಡುವವರಿಗೆ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಇಂದು ಸಂಜೆಯೊಳಗಡೆ ಸಾಲಮನ್ನಾ ಆಗದಿದ್ರೆ ಬಿಜೆಪಿಯಿಂದ ಸೋಮವಾರ ಕರ್ನಾಟಕ ಬಂದ್
ಬಿಜೆಪಿ ಮುಖಂಡರು, ಕಾರ್ಯಕರ್ತರಿಗೆ ಬಂದ್ ಮಾಡದಂತೆ ಮನವಿ ಮಾಡಲಾಗಿದ್ದು, ನಗರದ ಎಲ್ಲಾ ಡಿಸಿಪಿಗಳಿಗೆ ಬಂದ್ ಮಾಡುವವರ ವಿರುದ್ಧ ಸೂಕ್ತ ಕ್ರಮ ವಹಿಸಲು ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಫಿಲಂ ಚೇಂಬರ್ ನಿಂದ ಬೆಂಬಲವಿಲ್ಲ: ನಾಳೆ ನಡೆಯಲಿರುವ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಹಕಾರ ಇಲ್ಲ. ಎಂದಿನಂತೆ ಚಲನಚಿತ್ರ ಪ್ರದರ್ಶನ ಹಾಗೂ ಚಿತ್ರೀಕರಣಕ್ಕೆ ಯಾವುದೇ ರೀತಿಯಲ್ಲಿ ಅಡ್ಡಿ ಇಲ್ಲ. ಸ್ವಯಂ ಪ್ರೇರಿತರಾಗಿ ಯಾರಾದರೂ ಬೆಂಬಲ ಸೂಚಿಸಿದರೆ ಅದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ ಅಂತ ಫಿಲ್ಮ್ ಚೇಂಬರ್ ಅಧ್ಯಕ್ಷ ಸಾ.ರಾ ಗೋವಿಂದು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಂದ್ ಎನ್ನುವುದಕ್ಕಿಂತ ರೈತರೇ ಬಂದ್ ಮಾಡ್ತಾರೆ- ಬಿಎಸ್ವೈ
ಎಚ್ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶುಕ್ರವಾರ ಬಹುಮತ ಸಾಬೀತುಪಡಿಸಿದ್ದು, ಈ ಮೊದಲು ನಡೆದ ವಿಧಾನಸಭಾ ಕಲಾಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಅಂದೇ ಸಂಜೆಯೊಳಗೆ ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿದ್ರು. ಒಂದು ವೇಳೆ ರೈತರ ಸಾಲಮನ್ನಾ ಮಾಡದಿದ್ದಲ್ಲಿ ಸೋಮವಾರ ಕರ್ನಾಟಕ ಬಂದ್ ಮಾಡುವುದಾಗಿ ಹೇಳಿ ತಮ್ಮ ಮುಖಂಡರೊಂದಿಗೆ ಸಭಾತ್ಯಾಗ ಮಾಡಿದ್ದರು. ಇದನ್ನೂ ಓದಿ: ಸಾಲ ಮನ್ನಾ ಮಾಡುತ್ತೇವೆ ಅಂತಾ ಹೇಳಲಿ ಬಂದ್ ಹಿಂಪಡೆಯುತ್ತೇವೆ: ಕೆ.ಎಸ್.ಈಶ್ವರಪ್ಪ