ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟದಲ್ಲಿ ಪಕ್ಷೇತರರಿಬ್ಬರಿಗೆ ಸಚಿವ ಸ್ಥಾನ ಸಿಕ್ಕ ಬೆನ್ನಲ್ಲಿಯೇ ಕಾಂಗ್ರೆಸ್ನಲ್ಲಿ ಅತೃಪ್ತ ಶಾಸಕರ ರಣತಂತ್ರ ಬಿರುಸುಗೊಂಡಿದೆ.
ಅತೃಪ್ತ ನಾಯಕ ರಮೇಶ್ ಜಾರಕಿಹೊಳಿ ಅವರ ಮನೆಗೆ ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರತಾಪ್ಗೌಡ ಪಾಟೀಲ್ ಬೆಳ್ಳಂಬೆಳಗ್ಗೆ ಭೇಟಿ ನೀಡಿದ್ದಾರೆ. ಅಥಣಿ ಶಾಸಕ ಮಹೇಶ್ ಕುಮಟ್ಟಳ್ಳಿ ಅವರು ಕೂಡ ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದರು. ಈ ಎಲ್ಲ ಬೆಳವಣಿಗೆ ಕಾಂಗ್ರೆಸ್ ನಾಯಕರಲ್ಲಿ ಆತಂಕ ಹುಟ್ಟಿಸಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸೆವನ್ ಮಿನಿಸ್ಟರ್ ಕ್ವಾರ್ಟರ್ಸ್ ನಿವಾಸದಿಂದ ಹೊರ ಬರುತ್ತಿಲ್ಲ. ಹೀಗಾಗಿ ಮಾಜಿ ಸಚಿವರ ನಿವಾಸಕ್ಕೆ ಅತೃಪ್ತರ ಗುಂಪಿನಲ್ಲಿ ಸೇರಿರುವ ಪ್ರತಾಪ್ ಗೌಡ ಪಾಟೀಲ್ ರಹಸ್ಯ ಭೇಟಿ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಜೊತೆಗೆ ಮಾತುಕತೆ ನಡೆಸಿ, ಬಳಿಕ ಹಿಂದಿನ ಗೇಟ್ನಿಂದ ಹೊರ ಬಂದಿದ್ದಾರೆ. ಈ ವೇಳೆ ಶಾಸಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.
ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದಂತೆ ಪ್ರತಾಪ್ ಗೌಡ ಪಾಟೀಲ್ ಅವರಿಗೆ ರಮೇಶ್ ಜಾರಕಿಹೊಳಿ ತಾಕೀತು ಮಾಡಿದ್ದಾರೆ. ಇದೇ ಕಾರಣಕ್ಕೆ ಮಾಧ್ಯಮಗಳಿಂದ ಶಾಸಕರು ದೂರ ಉಳಿದರು ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.