– ರೈಲ್ವೇ ಇಲಾಖೆ ವಿರುದ್ಧ ಭಕ್ತರ ಆಕ್ರೋಶ
– ಹೈಕೋರ್ಟ್ ಆದೇಶದಂತೆ ಶನೇಶ್ವರ ಶಿಫ್ಟ್
ಬೆಂಗಳೂರು: ಸಾಮಾನ್ಯವಾಗಿ ಭಕ್ತರು ಶನಿವಾರ ಬಂದ್ರೆ ಶನೇಶ್ವರ ದೇವಸ್ಥಾನಕ್ಕೆ ಹೋಗುತ್ತಾರೆ. ಮೆಜೆಸ್ಟಿಕ್ ಸಮೀಪದ ಶನೇಶ್ವರ ದೇಗುಲಕ್ಕೂ ಸಾಕಷ್ಟು ಜನ ಬರುತ್ತಿದ್ದರು. ಆದರೆ ದೇವಸ್ಥಾನವನ್ನು ರೈಲ್ವೇ ಇಲಾಖೆಯವರು ಏಕಾಏಕಿ ತೆರವುಗೊಳಿಸಿದ್ದಾರೆ.
ಹೈಕೋರ್ಟ್ ಆದೇಶದಂತೆ ರೈಲ್ವೇ ಇಲಾಖೆಯ ಸಿಬ್ಬಂದಿ ಇಲಾಖೆಯ ಜಾಗದಲ್ಲಿದ್ದ ಶನೇಶ್ವರ ದೇವಸ್ಥಾನವನ್ನು ಶಿಫ್ಟ್ ಮಾಡಿದ್ದಾರೆ. ಆದರೆ ಈ ಬಗ್ಗೆ ಮಾಹಿತಿ ಇರದ ಭಕ್ತರು ಇಂದು ಶನೇಶ್ವರ ದೇವಸ್ಥಾನಕ್ಕೆ ಬಂದಿದ್ದಾರೆ. ದೇಗುಲ, ದೇವರ ಮೂರ್ತಿ ಇರದಿದ್ದನ್ನು ಕಂಡ ಭಕ್ತರು ರೈಲ್ವೇ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈಲ್ವೇ ಇಲಾಖೆ ಸಿಬ್ಬಂದಿಯು ಶನೇಶ್ವರನ ಮೂರ್ತಿಯನ್ನು ಶ್ರೀರಾಮಪುರದ ಅಯ್ಯಪ್ಪ ದೇಗುಲದಲ್ಲಿ ಇಟ್ಟಿದ್ದಾರೆ. ಆದರೆ ದೇವರ ಪಾದವನ್ನು ಮಾತ್ರ ಅಲ್ಲಿಯೇ ಬಿಟ್ಟಿದ್ದಾರೆ. ಇದನ್ನು ನೋಡಿದ ಭಕ್ತರು ರೈಲ್ವೇ ಇಲಾಖೆ ಸಿಬ್ಬಂದಿ ವಿರುದ್ಧ ಕಿಡಿಕಾರಿದ್ದಾರೆ.
ನಲವತ್ತು ವರ್ಷಗಳಿಂದ ಶನೇಶ್ವರ ಇದೆ. ಆದರೆ ಅದನ್ನು ಪದೇ ಪದೇ ರೈಲ್ವೇ ಇಲಾಖೆಯವರು ಶಿಫ್ಟ್ ಮಾಡುತ್ತಿದ್ದಾರೆ. ಹೀಗೆ ಮಾಡಿದರೆ ಹೇಗೆ. ಇಲ್ಲಿಗೆ ಬಂದು ದೇವರ ದರ್ಶನ ಪಡೆದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇತ್ತು. ಇಷ್ಟು ಜಾಗ ಖಾಲಿ ಇದೆ. ಇದರಲ್ಲಿ ದೇವಸ್ಥಾನಕ್ಕೆ ಒಂದಿಷ್ಟು ಜಾಗ ಬಿಟ್ಟಿದ್ದರೆ ಏನಾಗುತ್ತಿತ್ತು ಎಂದು ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ.
ಮೂರನೇ ಬಾರಿ ಶನೇಶ್ವರ ಶಿಫ್ಟಿಂಗ್:
ಇದವರೆಗೂ ಮೂರು ಬಾರಿ ಶನೇಶ್ವರ ದೇವಸ್ಥಾನವನ್ನು ಶಿಫ್ಟ್ ಮಾಡಲಾಗಿದೆ. ಈ ಹಿಂದೆ ಶ್ರೀರಾಮಪುರದಿಂದ ಓಕಳಿಪುರಂಗೆ ದೇಗುಲವನ್ನು ಶಿಫ್ಟ್ ಮಾಡಲಾಗಿತ್ತು. ಬಳಿಕ ರಸ್ತೆ ಅಗಲೀಕರಣಕದ ಉದ್ದೇಶದಿಂದ ರೈಲ್ವೇ ಇಲಾಖೆಯು ಆರು ತಿಂಗಳ ಹಿಂದಷ್ಟೇ ಮೆಜೆಸ್ಟಿಕ್ ಸಮೀಪದ ಸ್ಥಳಕ್ಕೆ ಶಿಫ್ಟ್ ಮಾಡಿತ್ತು. ಇದೀಗ ಅಲ್ಲಿಂದಲೂ ಶನೇಶ್ವರನನ್ನು ಓಕಳೀಪುರಂನಲ್ಲಿರುವ ಅಯ್ಯಪ್ಪ ದೇಗುಲಕ್ಕೆ ಶಿಫ್ಟ್ ಮಾಡಿದ್ದಾರೆ.