ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು, ಕೆಪಿಸಿಸಿ ಅಧ್ಯಕ್ಷರಾಗಿದ್ದು ಬಿಜೆಪಿ ಪಕ್ಷಕ್ಕೆ ಬಹಳ ಸುಲಭವಾಯಿತು ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಕೊರೊನಾ ವೈರಸ್ ಬಗ್ಗೆ ಶ್ರೀರಾಮುಲು ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಆರಂಭದಲ್ಲಿ ಶುಭಕೋರಿ ಶಿವಕುಮಾರ್ ಅವರು ಅಧ್ಯಕ್ಷರಾಗಿದ್ದು, ಬಿಜೆಪಿ ಬಹಳ ಸುಲಭವಾಯಿತು. ಆದು ಹೇಗೆ ಎಂಬುದನ್ನು ನಾನು ಮುಂದೆ ಹೇಳುತ್ತೇನೆ ಎಂದು ತಿಳಿಸಿದರು.
ಶಿವಕುಮಾರ್ ಅವರು ಪಕ್ಷದ ಸಿದ್ಧಾಂತಗಳೇ ಬೇರೆ ನಮ್ಮ ಪಕ್ಷದ ಸಿದ್ಧಾಂತಗಳೇ ಬೇರೆ. ನನ್ನ ವೈಯಕ್ತಿಕವಾಗಿ ಅವರು ಪ್ರಾದೇಶಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದಕ್ಕೆ ಶುಭಾಶಯ ಕೋರುತ್ತೇನೆ. ಡಿಕೆಶಿ ಅವರು ಅವರದ್ದೇ ಅದ ಹೋರಾಟ ಮಾಡಿಕೊಂಡು ಇಲ್ಲಿಯವರೆಗೆ ಮುಟ್ಟಿದ್ದಾರೆ. ನಾವು ಕೂಡ ಹೋರಾಟ ಮಾಡಿಕೊಂಡು ಇಲ್ಲಿಯ ತನಕ ಬಂದಿದ್ದೇವೆ. ಈ ರಾಜಕೀಯ ಚದುರಂಗದಲ್ಲಿ ಯಾರು ಯಶಸ್ವಿಯಾಗುತ್ತಾರೋ ಅವರು ನಾಯಕರು ಆಗುತ್ತಾರೆ. ಹಾಗೆಯೇ ಡಿಕೆಶಿ ಅವರಿಗೆ ಪಕ್ಷ ಗುರುತಿಸಿ ಅಧ್ಯಕ್ಷ ಸ್ಥಾನ ನೀಡಿದೆ ಎಂದರು.
ನಮ್ಮ ಪಕ್ಷದಲ್ಲಿ ಬಹಳ ಶಕ್ತಿವಂತ ನಾಯಕರು ಇದ್ದೇವೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಳುಗಿ ಹೋಗುತ್ತಿದೆ. ಇವತ್ತು ದೇಶದಲ್ಲಿ ಆಗುತ್ತಿರುವ ಬೆಳವಣಿಗೆಯನ್ನು ನೀವು ನೋಡುತ್ತಿದ್ದೀರಿ. ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ನಮ್ಮ ಪಕ್ಷ ಬಹಳ ಬಲಿಷ್ಠವಾಗಿ ಬೆಳೆಯುತ್ತದೆ. ಮುಳುಗುತ್ತಿರುವ ಕಾಂಗ್ರೆಸ್ ಪಾರ್ಟಿಗೆ ಯಾರೇ ಅಧ್ಯಕ್ಷರಾದರು ಅದು ಬಿಜೆಪಿಗೆ ಲಾಭವಾಗುತ್ತದೆ ಎಂದು ಹೇಳಿದರು.